ದೇಶದ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಐಐಟಿಯಲ್ಲಿ ಶೇ.40 ರಷ್ಟು ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜವಡೇಕರ್ ಹೇಳಿದ್ದಾರೆ.
ಸಿಂಬಯಾಸಿಸ್ ವಿಶ್ವವಿದ್ಯಾಲಯದ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ಪ್ರಕಾಶ್ ಜವಡೇಕರ್ ಉನ್ನತ ಶಿಕ್ಷಣದ ಅಂತರಾಷ್ಟ್ರೀಕರಣ ಕುರಿತು ಮಾತನಾಡುತ್ತ ಭಾರತದ ಉನ್ನತ ಶಿಕ್ಷಣದಲ್ಲಿ ಖಾಲಿ ಇರುವ ಹುದ್ದೆಗಳ ವಿಚಾರವನ್ನು ತೆರೆದಿಟ್ಟರು. ಇದೇ ಸಂದರ್ಭದಲ್ಲಿ ಆ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವುದರ ಬಗ್ಗೆಯು ಮಾಹಿತಿ ನೀಡಿದ್ದಾರೆ.
'ನಾವು ಕೂಡ ಭಾರತದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಸೌಕರ್ಯವನ್ನು ಕಲ್ಪಿಸಬಹುದು, ಆದರೆ ನಮ್ಮಲ್ಲಿ ಬೋಧಕರ ಕೊರತೆ ಇದೆ. ಶೇ.40 ರಷ್ಟು ಬೋಧಕ ಹುದ್ದೆಗಳು ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಐಐಟಿ ಯಲ್ಲಿ ಖಾಲಿ ಇವೆ' ಎಂದು ಅವರು ಹೇಳಿದ್ದಾರೆ.
ವಿದೇಶಗಳಲ್ಲಿ ನೆಲೆಸಿರುವ ಭಾರತೀಯ ಸಂಶೋಧನ ವಿದ್ಯಾರ್ಥಿಗಳನ್ನು ಮರಳಿ ಭಾರತಕ್ಕೆ ಕರೆ ತಂದು ಇಲ್ಲಿಯೇ ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲು ಹಾಗೂ ಇಲ್ಲಿಯೇ ಸೇವೆ ಸಲ್ಲಿಸುವ ಕುರಿತು ಐಐಟಿ ಸಮಿತಿಯೊಂದಿಗೆ ಚರ್ಚಿಸಿರುವುದಾಗಿ ಅವರು ಹೇಳಿದ್ದಾರೆ.
ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಹೆಚ್ಚು ಅಧ್ಯಾಪಕರುಗಳನ್ನು ನೇಮಕಗೊಳಿಸಲು ವಿಶೇಷ ಕ್ರಮ ಕೈಗೊಳ್ಳಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಅವರು ಹೇಳಿದ್ದಾರೆ.
ವಿಶ್ವದರ್ಜೆಯಲ್ಲಿ ಶಿಕ್ಷಣ ಸಂಸ್ಥೆಗಳು
ಉನ್ನತ ಶಿಕ್ಷಣದಲ್ಲಿ ವಿಶ್ವದರ್ಜೆ ಮಟ್ಟಕ್ಕೆ ಸೇರ ಬಯಸುವ ಹತ್ತು ಖಾಸಗಿ ಮತ್ತು ಹತ್ತು ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಆರ್ಥಿಕ ಜಾಗತೀಕರಣದ ಇಂದಿನ ದಿನಗಳಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ವಿದೇಶಿ ವಿದ್ಯಾರ್ಥಿಗಳಿಗೂ ಭಾರತದಲ್ಲಿ ಉನ್ನತ ಶಿಕ್ಷಣ ನೀಡುವುದಾಗಿ ಅವರು ತಿಳಿಸಿದ್ದಾರೆ.