ಕಳೆದ ತಿಂಗಳಷ್ಟೇ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ)2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರುನಿಶಾನೆ ನೀಡಿತ್ತು. ಈಗ ನೇಮಕಾತಿಯನ್ನು ವಿರೋಧಿಸಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಅಂಗೀಕರಿಸಿದೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಆರ್.ರೇಣುಕಾಂಬಿಕೆ ಸೇರಿದಂತೆ 13 ಜನರು ಸಾರ್ವಜನಿಕ ಹಿತಾಸಕ್ತಿ ಮೇಲೆ ಅರ್ಜಿಯನ್ನು ಸಲ್ಲಸಿದ್ದರು. ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಿಚಾರಣೆಗೆ ಅಂಗೀಕರಿಸಿದೆ.
2011ರ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ (ಕೆಪಿಎಸ್ಸಿ) ಆಯ್ಕೆಯಾದ ಎಲ್ಲ 362 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು ಸಚಿವ ಸಂಪುಟದ ಸಭೆಯಲ್ಲಿ ಕೆಲವು ಸಚಿವರ ವಿರೋಧದ ನಡುವೆಯೇ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ರಾಜ್ಯ ಸರ್ಕಾರದ ತೀರ್ಮಾನದಂತೆ ನೇಮಕಾತಿ ಪ್ರಕ್ರಿಯೆ ಮುಂದುವರೆಸಿ 78 ಅಭ್ಯರ್ಥಿಗಳಿಗೆ ನೇಮಕಾತಿಯ ಆದೇಶ ನೀಡಲಾಗಿದೆ.
ನೇಮಕಾತಿ ಆದೇಶ ನೀಡಲು ಕಾರಣ
ಕಳೆದ ಆರು ವರ್ಷಗಳಿಂದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳು ಭರ್ತಿಯಾಗದೇ ಇರುವುದರಿಂದ ಆಡಳಿತ ನಡೆಸುವುದು ಸಮಸ್ಯೆಯಾಗಿ ಉಳಿದಿತ್ತು. ನೇಮಕಾತಿಗೆ ಸಂಬಂಧಿಸಿದ ಗುಮಾನಿಗಳನ್ನು ತಳ್ಳಿ ಹಾಕಿ ಕೆಎಟಿ ಆದೇಶ ನೀಡಿದ್ದನ್ನು ಪರಿಗಣಿಸಿ, ಮೇಲ್ಮನವಿ ಸಲ್ಲಿಸದಿರಲು ಮತ್ತು ಆಯ್ಕೆ ಪಟ್ಟಿಯಲ್ಲಿರುವ ಎಲ್ಲರಿಗೂ ನೇಮಕಾತಿ ಆದೇಶ ನೀಡಲು ತೀರ್ಮಾನಿಸಲಾಗಿದೆ.
ನೇಮಕಾತಿ ವಿವಾದ
2011ರ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕದಲ್ಲಿ ಭಾರಿ ಅವ್ಯವಹಾರ ನಡೆಸಿದೆ ಎಂದು 2014ರ ಆ.7ರಂದು ಕೆಪಿಎಸ್ಸಿಯ ಆಯ್ಕೆ ಪಟ್ಟಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಇದಕ್ಕೆ ಪೂರಕವಾಗಿ ಸಿಐಡಿಯು ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಸರ್ಕಾರದ ಆದೇಶದ ವಿರುದ್ಧ ಕೆಲ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು. ಕೆಎಟಿ ಸರ್ಕಾರದ ಆದೇಶವನ್ನು ರದ್ದುಗೊಳಿಸಿತ್ತು.
ಹೈಕೋರ್ಟ್ ಆದೇಶ
- ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಕೆಪಿಎಸ್ಸಿ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಲಾಗಿದೆ.
- 'ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕ) ನಿಯಮ-1997ರ ಅನ್ವಯ ಕೆಪಿಎಸ್ಸಿ ಮುಖಾಂತರ 2011ರ ಸಾಲಿನಲ್ಲಿ ಆಯ್ಕೆಯಾದ ಯಾವುದೇ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಬಾರದು' ಎಂದು ಆದೇಶದಲ್ಲಿ ವಿವರಿಸಲಾಗಿದೆ.