ನೀಟ್ ಏಕರೂಪ ಪ್ರವೇಶ ಪರೀಕ್ಷೆ ಈಗ ರಾಜ್ಯದ ವಿದ್ಯಾರ್ಥಿಗಳಿಗೆ ಮಾರಕವಾಗಿ ಪರಿಣಮಿಸಿದೆ. ಏಕರೂಪ ಕೌನ್ಸಲಿಂಗ್ ನಡೆಯುತ್ತಿರುವುದರಿಂದ ರಾಜ್ಯದ ವಿದ್ಯಾರ್ಥಿಗಳ ಸೀಟುಗಳು ಹೊರರಾಜ್ಯದವರ ಪಾಲಾಗುತ್ತಿದೆ. ಖಾಸಗಿ ಕಾಲೇಜುಗಳಲ್ಲಿ ಹೊರರಾಜ್ಯದ ವಿದ್ಯಾರ್ಥಿಗಳಿಗೆ ಮಣೆ ಹಾಕುತ್ತಿದ್ದು, ಕನ್ನಡದ ಅಭ್ಯರ್ಥಿಗಳು ಇದರಿಂದ ತೊಂದರೆಗೀಡಾಗಿದ್ದಾರೆ.
ಸೀಟ್ ಮೆಟ್ರಿಕ್ಸ್ ಪ್ರಕಟಗೊಂಡ ನಂತರ ಕರ್ನಾಟಕದ ಕಾಲೇಜುಗಳ ಕಡೆ ಹೊರ ರಾಜ್ಯದವರು ಮುಗಿಬಿದ್ದಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮದಿಂದಾಗಿ ದೇಶದ ಯಾವುದೇ ರಾಜ್ಯದವರು ಬೇಕಿದ್ದರು ಕರ್ನಾಟಕದಲ್ಲಿ ಸೀಟು ಪಡೆಯಬಹುದಾಗಿದೆ. ಇದರಿಂದಾಗಿ ಕನ್ನಡದ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿಯೇ ಸೀಟುಗಳು ಸಿಗದಂತಾಗಿದೆ.
ತಮಿಳುನಾಡು, ಆಂಧ್ರಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಮುಂತಾದ ರಾಜ್ಯಗಳಲ್ಲಿ ತಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಮಾತ್ರ ಎಂಬಿಬಿಎಸ್, ಬಿಡಿಎಸ್ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಲು ಮೊದಲ ಆದ್ಯತೆ ನೀಡಲಾಗುತ್ತಿದೆ. ಆದರೆ, ನಮ್ಮ ರಾಜ್ಯದಲ್ಲಿ ಮಾತ್ರ ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ಮಣೆ ಹಾಕಲು ಮುಂದಾಗಿದ್ದಾರೆ. ಇದರಿಂದಾಗಿ ನೀಟ್ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ಕನ್ನಡದ ವಿದ್ಯಾರ್ಥಿಗಳಿಗೂ ಕರ್ನಾಟಕದಲ್ಲಿ ವೈದ್ಯಕೀಯ ಸೀಟು ಸಿಗದಂತಾಗುತ್ತದೆ.
ಕರ್ನಾಟಕದಲ್ಲಿ ಅತಿ ಕಡಿಮೆಗೆ ವೈದ್ಯಕೀಯ ಶಿಕ್ಷಣ ಸಿಗುತ್ತಿರುವುದರಿಂದ ಬಾರಿ ಪ್ರಮಾಣದ ಬೇಡಿಕೆ ಹೆಚ್ಚಾಗಿದ್ದು, ವೈದ್ಯಕೀಯ ಶಿಕ್ಷಣಕ್ಕೆ ಅರ್ಜಿ ಸಲ್ಲಿಸುವವರ ಸಂಖ್ಯೆ ಜಾಸ್ತಿಯಾಗಿ ಸ್ಪರ್ಧೆ ಏರ್ಪಟ್ಟಿದೆ.
ರಾಜ್ಯದಲ್ಲಿ ಖಾಸಗಿ ಮತ್ತು ಸರಕಾರಿ ಕಾಲೇಜುಗಳಲ್ಲಿ ಸಾಕಷ್ಟು ವೈದ್ಯಕೀಯ ಸೀಟುಗಳಿವೆ. ಸರಕಾರಿ ಕಾಲೇಜುಗಳಲ್ಲಿ ನಮ್ಮ ರಾಜ್ಯದವರಿಗೆ ಶೇ. 85 ಸೀಟುಗಳನ್ನು ನೀಡಲಾಗ್ತುತದೆ. ಉಳಿದಿದ್ದು ಎಲ್ಲ ರಾಜ್ಯಗಳಲ್ಲಿ ಇರುವಂತೆ ರಾಷ್ಟ್ರಮಟ್ಟದ ಸೀಟುಗಳಾಗಿರುತ್ತವೆ. ಆದರೆ, ಖಾಸಗಿ ಕಾಲೇಜುಗಳಲ್ಲಿ ಶೇ.60 ಸೀಟುಗಳನ್ನು ಬೇರೆ ರಾಜ್ಯದವರಿಗೆ ನೀಡಲಾಗುತ್ತಿದೆ.
ಕಳೆದ ವರ್ಷ 1900 ಎಂಡಿ, ಎಂಎಸ್ ಸೀಟುಗಳಲ್ಲಿ 400 ಸೀಟುಗಳನ್ನು ಹೊರರಾಜ್ಯದವರಿಗೆ ನೀಡಲಾಗಿತ್ತು. ಆ ಸೀಟುಗಳನ್ನು ನಮ್ಮವರಿಗೆ ನೀಡಿದ್ದರೆ ಇನ್ನೂ 400 ವೈದ್ಯರು ಸಿಗುತ್ತಿದ್ದರು. ಅಲ್ಲದೆ, ವಾರ್ಷಿಕವಾಗಿ ಸರಾಸರಿ ಒಂದು ಸಾವಿರ ವೈದ್ಯಕೀಯ ಸೀಟುಗಳನ್ನು ಹೊರ ರಾಜ್ಯದವರಿಗೆ ನೀಡುತ್ತಿರುವುದರಿಂದ ನಮ್ಮ ರಾಜ್ಯದ ಬಡ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಯುವ ವೈದ್ಯರ ಸಂಘದ ಅಧ್ಯಕ್ಷ ಡಾ. ಭರತ್ ಕುಮಾರ್ ಹೇಳಿದ್ದಾರೆ.
ನಮ್ಮ ರಾಜ್ಯಕ್ಕೆ ಬಂದು ವಿದ್ಯಾಭ್ಯಾಸ ಮುಗಿಸಿಕೊಂಡು ಹೋಗುವ ಹೊರ ರಾಜ್ಯದ ವಿದ್ಯಾರ್ಥಿಗಳು ಅವರ ರಾಜ್ಯದಲ್ಲಿ ಕೆಲಸ ಮಾಡುತ್ತಾರೆ ಹೊರತು ಕರ್ನಾಟಕದ ರೋಗಿಗಳಿಗೆ ಸೇವೆ ಮಾಡುವುದಿಲ್ಲ. ಆದರೆ, ಸರಕಾರ ರಾಜ್ಯದಲ್ಲಿ ವೈದ್ಯರ ಕೊರತೆ ಇದೆ ಎಂದು ಸಬೂಬು ಹೇಳುತ್ತಿರುವುದು ಎಷ್ಟು ಸರಿ. ಹೀಗಾಗಿ ಮೊದಲು ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿಕೊಟ್ಟಾಗ, ನಮ್ಮ ರಾಜ್ಯಕ್ಕಾಗಿ ಕೆಲಸ ಮಾಡುವ ವೈದ್ಯರು ಸೃಷ್ಟಿಯಾಗುತ್ತಾರೆ ಎಂದು ತಿಳಿಸಿದ್ದಾರೆ.