ಎಸ್ಎಸ್ಎಲ್ಸಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿಯನ್ನು ಏಪ್ರಿಲ್ 14 ರ ನಂತರ ಸಿದ್ಧಪಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವರಾದ ಎಸ್.ಸುರೇಶ್ ಕುಮಾರ್ ರವರು ತಿಳಿಸಿದ್ದಾರೆ.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ದೇಶದೆಲ್ಲೆಡೆ ಹೆಚ್ಚಿತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ, ಈ ಹಿಂದೆಯೇ 1-6ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಪರೀಕ್ಷೆ ರಹಿತ ಪಾಸ್ ಮಾಡಲು ಆದೇಶ ನೀಡಿತ್ತು. ಇಂದು 7 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೂ ಯಾವುದೇ ಪರೀಕ್ಷೆ ನಡೆಸದೆಯೇ ಮುಂದಿನ ತರಗತಿಗೆ ಪ್ರಮೋಷನ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಈ ವರ್ಷ 7 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಮಾಡಲು ಉದ್ದೇಶಿಸಲಾಗಿತ್ತು. ಆದರೆ ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿರುವ ಕಾರಣ, ಏಳನೇ ತರಗತಿ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆಗೊಳಪಡಿಸದೆ ಪಾಸ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
9 ತರಗತಿ ವಿದ್ಯಾರ್ಥಿಗಳಿಗೆ ಫಾರ್ಮೆಟಿವ್ ಮತ್ತು ಸಮ್ಮೇಟಿವ್ ಟೆಸ್ಟ್ಗಳ ಆಧಾರಿತವಾಗಿ ಮುಂದಿನ ತರಗತಿಗೆ ಪ್ರಮೋಟ್ ಮಾಡಲು ಉದ್ದೇಶಿಸಲಾಗಿದೆ. ಈ ಪರೀಕ್ಷೆಗಳಲ್ಲಿ ಪಾಸ್ ಆಗದ ವಿದ್ಯಾರ್ಥಿಗಳನ್ನು, ರಜೆಯ ಸಮಯದಲ್ಲಿ ಕಲಿಕೆಯಲ್ಲಿ ಉತ್ತಮಗೊಳಿಸಿ, ಅವರಿಗೆ ನಂತರ ಪರೀಕ್ಷೆ ನೀಡಿ ಪಾಸ್ ಮಾಡಲು ಶಾಲೆಗಳೇ ನಿರ್ಧಾರ ಕೈಗೊಳ್ಳಲು ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿರುತ್ತಾರೆ.
ರಾಜ್ಯದಲ್ಲಿ ದ್ವಿತೀಯ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ಬಾಕಿ ಉಳಿದಿದ್ದು, ಈ ವಿಷಯದ ಪರೀಕ್ಷೆಯನ್ನು ನಡೆಸುವ ದಿನಾಂಕವನ್ನು ಏಪ್ರಿಲ್ 14 ರ ನಂತರವೇ ನಿರ್ಧಾರ ತೆಗೆದುಕೊಳ್ಳುವುದಾಗಿ ಶಿಕ್ಷಣ ಸಚಿವರ ಸುರೇಶ್ ಕುಮಾರ್ ಹೇಳಿದ್ದಾರೆ.
ಆದರೆ ಪ್ರಮುಖವಾಗಿ ವಿದ್ಯಾರ್ಥಿಗಳು ಪರೀಕ್ಷೆಗಳಿಲ್ಲ ಎಂಬ ಕಾರಣಕ್ಕಾಗಿ ಬೀದಿಗೆ ಬರಬಾರದು. ಪೋಷಕರು ಮಕ್ಕಳ ಬಗ್ಗೆ ಜಾಗೃತಿ ವಹಿಸಿ ಅವರು ಹೊರಬರದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ.