ಜನವರಿ 3,2021ರಂದು ಭಾರತದ ಮೊದಲ ಮಹಿಳಾ ಶಿಕ್ಷಕಿಯ 191ನೇ ಜನ್ಮದಿನ. ಶಿಕ್ಷಣವೆಂದರೆ ತಿಳಿಯದ, ಅಕ್ಷರಗಳೆಂದರೆ ಗೊತ್ತಿಲ್ಲದ ಕಾಲದಲ್ಲಿ ಶಾಲೆಗಳನ್ನು ತೆರೆದು, ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ ಸಾವಿತ್ರಿಬಾಯಿ ಫುಲೆ.
ಭಾರತದ ಶಿಕ್ಷಣ ವ್ಯವಸ್ಥೆಗೆ ಫುಲೆ ದಂಪತಿಗಳ ಕೊಡುಗೆ ಅಪಾರ. ದಾಸ್ಯ ವಿಮೋಚನೆಗೆ ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲೇ ಇವರು ಅಜ್ಞಾನ ವಿಮೋಚನೆಗೆ ಅಕ್ಷರ ಕ್ರಾಂತಿ ಆರಂಭಿಸಿದ್ದರು. 1848ರಲ್ಲಿ ತಮ್ಮ ಮನೆಯಲ್ಲಿಯೇ ಶಾಲೆಯನ್ನು ಆರಂಭಿಸುವ ಮೂಲಕ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟು ಶೂದ್ರರು-ಅತಿಶೂದ್ರರು ಮತ್ತು ಮಹಿಳೆಯರಿಗೆ ವಿದ್ಯಾದಾನ ಮಾಡುವ ಮೂಲಕ ಹೊಸ ಮನ್ವಂತರವೊಂದಕ್ಕೆ ನಾಂದಿ ಹಾಡಿದರು.
ಸಾವಿತ್ರಿಬಾಯಿ ಫುಲೆ 1831ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ 'ನೈಗಾಂನ್'ನಲ್ಲಿ ಹುಟ್ಟಿದರು. ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಜ್ಯೋತಿಬಾ ಫುಲೆ ಅವರನ್ನು ವಿವಾಹವಾದರು. ಮದುವೆಯಾದಾಗ ಅವರಿಗೆ 8 ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ 13 ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಅವರ ಯಶಸ್ಸು, ಶ್ರೇಯಸ್ಸಿನ ವಿಕ್ರಮಪಾಲು ಜ್ಯೋತಿ ಬಾ ಫುಲೆ ಅವರದಾಗಿತ್ತು. ಸ್ತ್ರೀ ಶಿಕ್ಷಣವನ್ನು ತೆರೆದ ಕೀರ್ತಿ ಜ್ಯೋತಿಬಾಫುಲೆ ಅವರಿಗೆ ಸಲ್ಲಬೇಕು.
ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. 1847ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಭೇತಿ ಪಡೆದರು. ಆಗ ಅವರಿಗೆ 17 ವರ್ಷ. ಹೀಗಾಗಿ ಮಹಾರಾಷ್ಟ್ರದಲ್ಲಿ ತರಭೇತಾದ ಮೊದಲ ಶಿಕ್ಷಕಿಯಾದರು.
ಶಿಕ್ಷಕಿಯಾಗಿ
ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಹಿಂದೂ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ. ಅವರು ಪಾಠಶಾಲೆಗೆ ಹೋರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು.
ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರ ಗೊಳ್ಳದೆ- ನಮ್ಮ ಮೇಲೆ ಎರಚುವ ಸೆಗಣಿ, ತೂರುವ ಕಲ್ಲುಗಳನ್ನು ಹೂಗಳೆಂದು ಪರಿಭಾವಿಸಿ, ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಅಣಿಯಾಗುತ್ತಿದ್ದರು. 1848ರಿಂದ 1852 ಅವಧಿಯಲ್ಲಿ 18 ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು.
ಈ ಪಾಠಶಾಲೆಗಳ ಶಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಜ್ಯೋತಿಬಾಫುಲೆ ಅವರಿಗೆ ನೆರವಾದರು. ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ಸೂಸಿದ್ದರು.
ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿ ಬಾಪುಲೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ, ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು, ಅಬಲಾಶ್ರಮ ಸ್ಥಾಪನೆ ಮಾಡಿದ ಕೀತಿ೯ ಇವರಿಗೆ ಸಲ್ಲುತ್ತದೆ. ಇವರು ಒಟ್ಟು 14 ಶಾಲೆಗಳನ್ನು ಸ್ಥಾಪನೆ ಮಾಡುತ್ತಾರೆ.
ಈ ಎಲ್ಲಾ ಸಾಧನೆಗಳನ್ನು ಪರಿಗಣಿಸಿ , ಬ್ರಿಟಿಷ್ ಸರಕಾರ ಇವರಿಗೆ "ಇಂಡಿಯಾಸ್ ಫಸ್ಟ್ ಲೇಡಿ ಟೀಚರ್" ಎಂದು ಬಿರುದು ಕೂಡ ಕೊಟ್ಟಿದೆ. ಸ್ತ್ರೀಯರು ಕೂಡ ಪುರುಷರಂತೆ ಶಿಕ್ಷಣವನ್ನು ಪಡೆಯಬೇಕೆಂಬ ಮಹದಾಸೆಯಿಂದ ತಮಗೊದಗಿದ ಕಷ್ಟ - ಕಾರ್ಪಣ್ಯಗಳನ್ನು ಲೆಕ್ಕಿಸದೇ ಸ್ತ್ರೀ ಸಂಕುಲಕ್ಕೆ ಶೈಕ್ಷಣಿಕ ರಹದಾರಿಯನ್ನು ತೋರಿಸಿದರು.