ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ)2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯನ್ನು ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರದ್ದು ಪಡಿಸಿದ್ದ ರಾಜ್ಯ ಸರ್ಕಾರ, ಬುಧವಾರ ಅಷ್ಟೂ ಹುದ್ದೆಗಳ ನೇಮಕಾತಿಗೆ ಹಸಿರುನಿಶಾನೆ ತೋರಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಕೆಲವು ಸಚಿವರ ವಿರೋಧದ ಮಧ್ಯೆಯೂ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ಮೂಲಕ ಎಲ್ಲಾ 362 ಅಭ್ಯರ್ಥಿಗಳಿಗೂ ನೇಮಕಾತಿ ಆದೇಶ ನೀಡಲು ತೀರ್ಮಾನಿಸಿದೆ.
ಕೊನೆಗೂ 2011ರ ಬ್ಯಾಚ್ 362 ಮಂದಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಬುಧವಾರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬುಧವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಕಾನೂನು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಟಿಬಿ ಜಯಚಂದ್ರ ಸದ್ದಿಗೋಷ್ಠಿ ನಡೆಸಿ, ಕೆಎಟಿ ಆದೇಶದ ಬಗ್ಗೆ ಕಾನೂನು ತಜ್ಞರ ಜತೆ ಮಾತುಕತೆ ನಡೆಸಿ. ಆಡಳಿತದ ದೃಷ್ಟಿಯಿಂದ ರಾಜ್ಯ ಸರ್ಕಾರ ಆದೇಶವನ್ನು ಪ್ರಶ್ನಿಸದೇ ಇರಲು ನಿರ್ಧರಿಸಿದೆ. ಹೀಗಾಗಿ ಎಲ್ಲಾ 362 ಗೆಜೆಟೆಡ್ ಪ್ರೊಬೇಷನರಿ ಅಭ್ಯರ್ಥಿಗಳ ನೇಮಕಾತಿಗೆ ಒಪ್ಪಿಗೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ನೇಮಕಾತಿ ವಿವಾದ
2011ರ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕದಲ್ಲಿ ಭಾರಿ ಅವ್ಯವಹಾರ ನಡೆಸಿದೆ ಎಂದು 2014ರ ಆ.7ರಂದು ಕೆಪಿಎಸ್ಸಿಯ ಆಯ್ಕೆ ಪಟ್ಟಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಇದಕ್ಕೆ ಪೂರಕವಾಗಿ ಸಿಐಡಿಯು ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಸರ್ಕಾರದ ಆದೇಶದ ವಿರುದ್ಧ ಕೆಲ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು. ಕೆಎಟಿ ಸರ್ಕಾರದ ಆದೇಶವನ್ನು ರದ್ದುಗೊಳಿಸಿತ್ತು.
ನೇಮಕಾತಿ ಆದೇಶ ನೀಡಲು ಕಾರಣ
ಕಳೆದ ಆರು ವರ್ಷಗಳಿಂದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳು ಭರ್ತಿಯಾಗದೇ ಇರುವುದರಿಂದ ಆಡಳಿತ ನಡೆಸುವುದು ಸಮಸ್ಯೆಯಾಗಿ ಉಳಿದಿತ್ತು. ನೇಮಕಾತಿಗೆ ಸಂಬಂಧಿಸಿದ ಗುಮಾನಿಗಳನ್ನು ತಳ್ಳಿ ಹಾಕಿ ಕೆಎಟಿ ಆದೇಶ ನೀಡಿದ್ದನ್ನು ಪರಿಗಣಿಸಿ, ಮೇಲ್ಮನವಿ ಸಲ್ಲಿಸದಿರಲು ಮತ್ತು ಆಯ್ಕೆ ಪಟ್ಟಿಯಲ್ಲಿರುವ ಎಲ್ಲರಿಗೂ ನೇಮಕಾತಿ ಆದೇಶ ನೀಡಲು ತೀರ್ಮಾನಿಸಲಾಗಿದೆ. ಈ ಹಿಂದೆ ಸಿಐಡಿ ತನಿಖೆ ಸಂದರ್ಭದಲ್ಲಿ ಆರೋಪಿಗಳೆಂದು ಗುರುತಿಸಲ್ಪಟ್ಟಿದ್ದ 46 ಅಭ್ಯರ್ಥಿಗಳೂ ಕೂಡ ಷರತ್ತುಬದ್ಧ ನೇಮಕಾತಿಗೆ ಅರ್ಹರಾಗಿದ್ದಾರೆ.
ನೇಮಕಾತಿ ಪ್ರಕ್ರಿಯೆ
ನೇಮಕಾತಿಗೆ ಮುನ್ನ ಪೊಲೀಸ್ ಪರಿಶೀಲನೆ ಹಾಗೂ ನೇಮಕಾತಿ ಆದ ಮೇಲೆ ಕಾಯಂ ಪೂರ್ವ ಅವಧಿ ಇರುತ್ತದೆ. ಈ ಅವಧಿಯಲ್ಲಿ ಸರ್ಕಾರದ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶ ಇರಲಿದೆ.
ಇದನ್ನು ಗಮನಿಸಿ:ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ