ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಹೊತ್ತಿರುವ ಕೆಎಸ್ಒಯುವನ್ನು ಮುಚ್ಚುವ ಸುದ್ದಿಯನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಭರವಸೆ ನೀಡಿದೆ.
ಕೆಎಸ್ಒಯು ಮುಚ್ಚುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ. ಮೂರೂವರೆ ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ನಮಗೂ ಕಾಳಜಿಯಿದೆ. ಕೆಎಸ್ಒಯು ಪುನರಾರಂಭ ಮಾಡಲು ಅಗತ್ಯ ಕ್ರಮಕೈಗೊಳ್ಳುತ್ತೇವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಆಶ್ವಾಸನೆ ನೀಡಿದ್ದಾರೆ.

ಕೆಎಸ್ಒಯು ಮುಚ್ಚಬೇಕಾಗಬಹುದು ಎಂದು ಕರ್ನಾಟಕದ ಸಚಿವರೊಬ್ಬರು ಯಾವ ಕಾರಣಕ್ಕಾಗಿ ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೆಸರನ್ನು ಪ್ರಸ್ತಾಪಿಸದೇ ಜಾವಡೇಕರ್ ಪರೋಕ್ಷವಾಗಿ ಹೇಳಿದ್ದಾರೆ.
ಕೆಎಸ್ಒಯುನಲ್ಲಿ ₹500 ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಗರಣ ಕುರಿತು ನಾಲ್ಕು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಆಂತರಿಕ ಲೆಕ್ಕ ಪರಿಶೋಧನಾ ವರದಿಯಲ್ಲಿ ಕೆಲವು ಗೊಂದಲಗಳಿವೆ. ಈ ಎಲ್ಲವನ್ನು ಪರಿಶೀಲಿಸಿ ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ವರದಿ ಸಲ್ಲಿಸಲಿದೆ. ಆ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಕೆಎಸ್ಒಯು ಕುಲಪತಿ ಪ್ರೊ.ಡಿ. ಶಿವಲಿಂಗಯ್ಯ ನೇತೃತ್ವದಲ್ಲಿ ಕೆಎಸ್ಒಯು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ನಿಯೋಗ ಜಾವಡೇಕರ್ ಅವರನ್ನು ಶುಕ್ರವಾರ ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿತ್ತು.
ಇದನ್ನು ಗಮನಿಸಿ: ಕೆಎಸ್ಒಯು ಮುಚ್ಚುವ ಭೀತಿ: ದಯಾಮರಣ ಕೋರಿದ ಮಂಡ್ಯ ಯುವಕ
ಕೆಎಸ್ಒಯು ಮಾನ್ಯತೆ ವಿಷಯ ಇತ್ಯರ್ಥವಾಗದೇ ಇರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆತಂಕಕ್ಕೆ ಸಿಲುಕಿದ್ದಾರೆ. ಕೂಡಲೇ ಮಧ್ಯ ಪ್ರವೇಶಿಸುವಂತೆ ನಿಯೋಗ ಮನವಿ ಮಾಡಿತ್ತು. ಕೇಂದ್ರದ ಈ ನಿರ್ಧಾರದಿಂದ ಕೆಎಸ್ಒಯು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗ ಕೊಂಚ ನಿರಾಳರಾಗಿದ್ದಾರೆ.


Click it and Unblock the Notifications











