ದೇಶದಾದ್ಯಂತ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ)ಯ ಬೋರ್ಡ್ ಪರೀಕ್ಷೆಗಳನ್ನು ಮಾ.31ರ ಬಳಿಕ ನಡೆಸುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬುಧವಾರ ಸೂಚನೆ ನೀಡಿದೆ. ಸಿಬಿಎಸ್ಇ, ಯುಜಿಸಿ, ಎಐಸಿಟಿಇ, ಜಾಯಿಂಟ್ ಎಂಟ್ರನ್ಸ್ ಎಕ್ಸಾಮಿನೇಶನ್ (ಜೆಇಇ), ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್ಐಓಎಸ್)ಗೂ ಈ ನಿಯಮ ಅನ್ವಯವಾಗುತ್ತದೆ ಎಂದು ಸಚಿವಾಲಯದ ಕಾರ್ಯದರ್ಶಿ ಅಮಿತ್ ಖರೆ ತಿಳಿಸಿದ್ದಾರೆ.

ಕೇಂದ್ರ ಉನ್ನತ ಹಾಗೂ ಪ್ರಾಥಮಿಕ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಪರೀಕ್ಷಾ ದಿನಾಂಕಗಳನ್ನು ಬದಲಿಸಿದೆ. ಸಿಬಿಎಸ್ಇಯಿಂದ ನಡೆಯುತ್ತಿರುವ 10 ಹಾಗೂ 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮಾರ್ಚ್ 19 ರಿಂದ 31ರ ವರೆಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮಾರ್ಚ್ 31ರ ನಂತರ ನಡೆಸಲು ನಿರ್ಧರಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಪರಿಷ್ಕೃತ ವೇಳಾ ಪಟ್ಟಿಯನ್ನು ಮಾರ್ಚ್ 31ರ ನಂತರ ಘೋಷಿಸಲಾಗುವುದು, ಪರೀಕ್ಷೆಗಳು ಮಾತ್ರವಲ್ಲದೆ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಮೌಲ್ಯಮಾಪನಾ ಪ್ರಕ್ರಿಯೆಯನ್ನೂ ಮಾರ್ಚ್ 31ರ ವರೆಗೆ ಸ್ಥಗಿತಗೊಳಿಸಲಾಗಿದೆ. ಮಂಡಳಿಯಿಂದ ಯಾವುದೇ ಆದೇಶ ಪ್ರಕಟವಾಗದಿದ್ದಲ್ಲಿ ಎಲ್ಲ ಮೌಲ್ಯಮಾಪನ ಕೇಂದ್ರಗಳ ಮೇಲ್ವಿಚಾರಕರು ಏಪ್ರಿಲ್ 1ರಿಂದ ಮೌಲ್ಯಮಾಪನ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಸೂಚಿಸಲಾಗಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎಟಿಎ) ಸಹ ಐಐಟಿಯ ಜೆಇಇ, ಎಂಜಿನಿಯರಿಂಗ್ ಕಾಲೇಜ್ ಪ್ರವೇಶ ಪ್ರಕ್ರಿಯೆಯನ್ನು ಮುಂದೂಡಿದೆ. ವೇಳಾಪಟ್ಟಿಗೆ ಅನುಗುಣವಾಗಿ ಜೆಇಇ ಹೊಸ ದಿನಾಂಕವನ್ನು ನಿರ್ಧರಿಸಲಿದೆ. ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಹ ಮಾಹಿತಿ ನೀಡಲಿದೆ ಎಂದು ಎನ್ಟಿಎ ತಿಳಿಸಿದೆ.
ದೇಶದಲ್ಲಿ ಕೊರೊನಾ ವೈರಸ್ನಿಂದಾಗಿ ಈಗಾಗಲೆ 3 ಜನ ಸಾವನ್ನಪ್ಪಿದ್ದು, 151 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಶೈಕ್ಷಣಿಕ ಕ್ಯಾಲೆಂಡರ್ ಮತ್ತು ಪರೀಕ್ಷೆಯ ವೇಳಾಪಟ್ಟಿಯನ್ನು ನಿರ್ವಹಿಸುವುದು ಮುಖ್ಯವಾದರೂ, "ವಿವಿಧ ಪರೀಕ್ಷೆಗಳಲ್ಲಿ ಹಾಜರಾಗುವ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅವರ ಶಿಕ್ಷಕರು ಮತ್ತು ಪೋಷಕರ ಸುರಕ್ಷತೆಯೂ ಅಷ್ಟೇ ಮುಖ್ಯ" ಎಂದು ಮಾನವ ಸಂಪನ್ಮೂಲ ಕಾರ್ಯದರ್ಶಿ ಅಮಿತ್ ಖರೆ ಹೇಳಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಸಾಮೂಹಿಕ ತರಬೇತಿ ಹಾಗೂ ಕ್ರೀಡಾ ಚಟುವಟಿಕೆಗಳು ಮತ್ತು ಸಶಸ್ತ್ರ ಪಡೆಗಳ ವಿವಿಧ ವಿಭಾಗಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳನ್ನು ತಾತ್ಕಾಲಿಕ ಅವಧಿಗೆ ಮುಂದೂಡಬೇಕೆಂದು ನಿರ್ದೇಶಿಸಿದೆ. ಇನ್ನು, ಸೋಂಕು ಭೀತಿ ಹಿನ್ನೆಲೆಯಲ್ಲಿ ವಾರ್ಷಿಕ ಪರೀಕ್ಷೆ ನಡೆಸದೇ 1 ರಿಂದ 8ನೇ ತರಗತಿಯ ಎಲ್ಲ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಉತ್ತರ ಪ್ರದೇಶ ಸರಕಾರ ನಿರ್ಧರಿಸಿದೆ. ಯುಪಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ಸಿನಿಮಾ ಹಾಲ್, ಮಲ್ಟಿಪ್ಲೆಕ್ಸ್ ಮತ್ತು ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡದಂತೆ ಏ.2ರವರೆಗೆ ನಿರ್ಬಂಧ ವಿಧಿಸಲಾಗಿದೆ.


Click it and Unblock the Notifications











