ಪದವಿ ಮತ್ತು ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಿಸಿದರು.
ಎಸ್ಸಿಪಿ/ಟಿಎಸ್ಪಿ (Special Component Plan (SCP) and Tribal Sub Plan (TSP)) ಯೋಜನೆಯಡಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಪ್ರಥಮ ಪದವಿ ಮತ್ತು ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ಫಲಾನುಭವಿ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ಗಳನ್ನು ಪಡೆದುಕೊಂಡರು.

ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಒದಗಿಸಲಾದ ಅನುದಾನದಲ್ಲಿ ಉಚಿತ ಲ್ಯಾಪ್ಟಾಪ್ಗಳನ್ನು ನೀಡಲಾಗುತ್ತಿದೆ. ಈ ಯೋಜನೆಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿರುವ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲವಾಗಲು ಇ-ಕಂಟೆಂಟ್ ತುಂಬಿಸಿದ ಲ್ಯಾಪ್ಟಾಪ್ಗಳನ್ನು ನೀಡಲಾಗಿದೆ. ಲ್ಯಾಪ್ಟಾಪ್ ಸುಮಾರು 300 ಕೋಟಿ ರೂ. ವೆಚ್ಚದಲ್ಲಿ ಎಲ್ಲಾ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಈ ವರ್ಷ ಲ್ಯಾಪ್ಟಾಪ್ ಉಚಿತವಾಗಿ ನೀಡಲಾಗುತ್ತಿದೆ.
ಈ ಉಚಿತ ಲ್ಯಾಪ್ಟಾಪ್ ವಿತರಣೆ ಸದ್ಯದ ಮಟ್ಟಿಗೆ ಪ.ಜಾ. ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ಸೀಮಿತವಾಗಿರುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಇತರೆ ಎಲ್ಲ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು. 2018-19ನೇ ಸಾಲಿನಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.
ಬಜೆಟ್ನಲ್ಲಿ ಘೋಷಣೆ ಮಾಡಿರುವಂತೆ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ವರ್ಷದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ 31742 ಲ್ಯಾಪ್ಟಾಪ್ಗಳನ್ನು ಉಚಿತವಾಗಿ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ಇಂದು ವಿತರಿಸಲಾಗಿದ್ದು, ಉಳಿದ ಜಿಲ್ಲೆಗಳಲ್ಲೂ ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಲ್ಯಾಪ್ಟಾಪ್ಗಳನ್ನು ವಿತರಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಿಳಿಸಿದ್ದಾರೆ.
ಲ್ಯಾಪ್ಟಾಪ್ ವಿತರಣಾ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವಾಲಯವು ಹಮ್ಮಿಕೊಂಡಿತ್ತು, ಕಾರ್ಯಕ್ರಮದಲ್ಲಿ ಬೆಂಗಳೂರು ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಇನ್ನಿತರ ಕಾಂಗ್ರೆಸ್ ಪ್ರಮುಖ ಮುಖಂಡರು ಭಾಗವಹಿಸಿದ್ದರು.


Click it and Unblock the Notifications











