2017ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಯಾವುದೇ ಗೊಂದಲಗಳಿಲ್ಲದೆ ಯಶಸ್ವಿಯಾಗಿ ನಿಭಾಯಿಸಿದ ಶಿಕ್ಷಣ ಇಲಾಖೆ 2018 ರ ಪರೀಕ್ಷೆಗಳನ್ನು ಮತ್ತಷ್ಟು ಪಾರದರ್ಶಕವಾಗಿ ನಡೆಸಲು ಮುಂದಾಗಿದೆ.
ಪರೀಕ್ಷೆ ಸಂದರ್ಭದಲ್ಲಿ ಉಂಟಾಗುವ ನಕಲು ಹಾವಳಿ, ಪ್ರಶ್ನೆ ಪತ್ರಿಕೆ ಸೋರಿಕೆ, ಸೇರಿದಂತೆ ಹಲವು ಸಮಸ್ಯೆಗಳ ನಿವಾರಣೆಗಾಗಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯನ್ನು ಏಕಕಾಲದಲ್ಲಿ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಏಕಕಾಲದಲ್ಲಿ ಪರೀಕ್ಷೆ ನಡೆಸುವ ಸಂಬಂಧ ಈಗಾಗಲೇ ಶಿಕ್ಷಣ ತಜ್ಞರು, ಪೋಷಕರು ಸೇರಿದಂತೆ ಸಾರ್ವಜನಿಕರಿಂದಲೂ ಅಭಿಪ್ರಾಯಪಡೆದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಮುಂದಿನ ಶೈಕ್ಷಣಿಕ ವರ್ಷದಿಂದ ಇದನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಿದೆ.
ಈಗಾಗಲೇ ಇಲಾಖೆ ಅಧಿಕಾರಿಗಳು ಕೂಡ ಮೂರು ಸುತ್ತಿನ ಮಾತುಕತೆ ನಡೆಸಿದ್ದಾರೆ. ಇನ್ನು ಎರಡು ಸುತ್ತಿನ ಮಾತುಕತೆ ನಡೆಸಿದ ಬಳಿಕ ಅಂತಿಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವರದಿಯೊಂದನ್ನು ನೀಡಲಿದೆ. ಇದಕ್ಕೆ ಅನುಮೋದನೆ ಸಿಕ್ಕರೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರುವ ಶೈಕ್ಷಣಿಕ ವರ್ಷದಿಂದಲೇ ಒಂದೇ ಹಂತದಲ್ಲಿ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ಸೇಠ್ ತಿಳಿಸಿದ್ದಾರೆ.
ನೂತನ ಪರೀಕ್ಷಾ ವಿಧಾನ
ಸಾಮಾನ್ಯವಾಗಿ ಮಾರ್ಚ್, ಏಪ್ರಿಲ್ ತಿಂಗಳ ಮಧ್ಯಭಾಗದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯನ್ನು ಪ್ರತ್ಯೇಕವಾಗಿ ನಡೆಸಲಾಗುತ್ತಿತ್ತು. ಈ ವೇಳೆ ನಕಲು, ಪ್ರಶ್ನೆ ಪತ್ರಿಕೆ ಸೋರಿಕೆ, ಅದಲು-ಬದಲು ಸೇರಿದಂತೆ ಒಂದಿಲ್ಲೊಂದು ಗೊಂದಲಗಳು ಮೂಡಿ ಪರೀಕ್ಷೆಯನ್ನು ಮುಂದೂಡಿದ ಪ್ರಸಂಗಗಳು ಅನೇಕ ಬಾರಿ ನಡೆದಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಪರೀಕ್ಷಾ ಸಮಯದಲ್ಲಿ ಶಿಕ್ಷಣ ಇಲಾಖೆಯನ್ನು ದೂರುವಂತಾಗುತ್ತಿತ್ತು.
ಮುಂದಿನ ವರ್ಷದಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಎರಡೂ ಪರೀಕ್ಷೆಗಳನ್ನು ಒಂದೇ ಹಂತದಲ್ಲಿ ನಡೆಸಲಿದೆ. ಅಂದರೆ, ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಪ್ರತಿ ಒಂದು ಡೆಸ್ಕ್ ಗೆ ಇಬ್ಬರು ವಿದ್ಯಾರ್ಥಿಗಳನ್ನು ಕೂರಿಸಿ ಪರೀಕ್ಷೆ ಬರೆಸಲಾಗುವುದು.
ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಒಂದೇ ವಾಹನದಲ್ಲಿ ತಂದು ಪರೀಕ್ಷೆ ಆರಂಭಕ್ಕೂ ಮುನ್ನ ಐದು ನಿಮಿಷಕ್ಕೆ ಮುಂಚಿತವಾಗಿ ತೆರೆಯಬೇಕು. ಆಯಾ ಶಿಕ್ಷಕರೇ ಪ್ರಶ್ನೆ ಪತ್ರಿಕೆ ವಿತರಣೆ ಮಾಡಬೇಕು.
ಮುಂದಿರುವ ಪ್ರಶ್ನೆಗಳು
ಏಕಕಾಲದಲ್ಲಿ ಪರೀಕ್ಷೆ ನಡೆಸುವುದು ಸುಲಭದ ಮಾತಲ್ಲ, ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಸಂಖ್ಯೆ ಸುಮಾರು 15 ಲಕ್ಷ ದಾಟುತ್ತದೆ. ಕಳೆದ ವರ್ಷ ಎಸ್ಸೆಸ್ಸೆಲ್ಸಿ ವಿಭಾಗದಿಂದ 8 ಲಕ್ಷ, ಪಿಯುಸಿ ವಿಭಾಗದಿಂದ 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದರು. ಈ ಬಾರಿ ಇದರ ಸಂಖ್ಯೆ ಹೆಚ್ಚಾಗಲಿದ್ದು, 15 ಲಕ್ಷ ಗಡಿ ದಾಟುವ ಸಂಭವವಿದೆ.
ಸದ್ಯಕ್ಕೆ ರಾಜ್ಯದಲ್ಲಿ 16ಸಾವಿರ ಸರ್ಕಾರಿ ಪ್ರೌಢಶಾಲೆಗಳು(ಅನುದಾನ/ಅನುದಾನ ರಹಿತ ಸೇರಿ) ಹಾಗೂ 5ಸಾವಿರ ಪವಿ ಪೂರ್ವ ಕಾಲೇಜುಗಳಿವೆ. ಒಂದೇ ಹಂತದಲ್ಲಿ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಬೇಕಾದ ಕೊಠಡಿ, ವಾಹನ ಸೌಲಭ್ಯ ಸೇರಿದಂತೆ ಕೆಲ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಾಗುವ ಸಂಭವವಿದೆ.