ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಗೌರವ ಧನವನ್ನು ಹೆಚ್ಚಳ ಮಾಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ಅಲ್ಲದೇ ಪ್ರಸ್ತುತ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಜೂನ್15ರೊಳಗೆ ಅತಿಥಿ ಶಿಕ್ಷಕರನ್ನು ನೇಮಿಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹ 6,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹ 7,000 ಗೌರವಧನ ನೀಡಲಾಗುತ್ತಿದೆ. ಅದನ್ನು ₹ 10,000 ದಿಂದ ₹ 15,000ಕ್ಕೆ ಹೆಚ್ಚಿಸಿ ಹೆಚ್ಚುವರಿ ವೇತನದ ಹಣವನ್ನು ಹಿಂದುಳಿದ ಪ್ರದೇಶಾಭಿವೃದ್ಧಿ ನಿಧಿ (ಬಿಆರ್ಜಿಎಫ್) ಯೋಜನೆಯಡಿ ಭರಿಸುವ ಕುರಿತು ಪರಿಶೀಲಿಸಲಾಗುತ್ತಿದೆ' ಎಂದು ತಿಳಿಸಿದ್ದಾರೆ

'ರಾಜ್ಯದಾದ್ಯಂತ ಒಟ್ಟು 10 ಸಾವಿರ ಶಿಕ್ಷಕರನ್ನು ನೇಮಿಸಲು ಆದೇಶ ನೀಡಲಾಗಿದೆ. ಈ ಪೈಕಿ ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಲ್ಲಿ 4,760 ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ' ಎಂದು ಹೇಳಿದರು.
'ಗಣಿತ ಹಾಗೂ ವಿಜ್ಞಾನ ಶಿಕ್ಷಕರ ಕೊರತೆ ಇರುವ ಜಿಲ್ಲೆಗಳಲ್ಲಿ ನಿವೃತ್ತ ಶಿಕ್ಷಕರನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಕೆಲವು ನಿಬಂಧನೆಗಳನ್ನು ವಿಧಿಸಿ, ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಂತೆ ಸೂಚನೆಯನ್ನೂ ನೀಡಲಾಗಿದೆ' ಎಂದು ಸಚಿವರು ಹೇಳಿದರು.
'ಬೋಧನೆ ಹೊರತುಪಡಿಸಿ ಶಿಕ್ಷಕರನ್ನು ಯಾವುದೇ ಸಮೀಕ್ಷೆ ಕಾರ್ಯಕ್ಕೆ ಬಳಸುವುದಿಲ್ಲ. ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ ಮಾಡುವುದಿಲ್ಲ. ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಲು ಒತ್ತು ಕೊಡಲಾಗುವುದು' ಎಂದು ಕೂಡ ತಿಳಿಸಿದರು.


Click it and Unblock the Notifications











