ಕರ್ನಾಟಕದಲ್ಲಿ ಹಿಜಾಬ್-ಕೇಸರಿ ವಿವಾದ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ನಾಳೆಯಿಂದ 3 ದಿನಗಳ ರಜೆಯನ್ನು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ ಪ್ರೌಢಶಾಲೆ, ಪಿಯು ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದಾರೆ.
ಅಂದರೆ ದಿನಾಂಕ 09-02-2022 ರಿಂದ 11-02-2022 ರವರೆಗೆ ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಟ್ವಿಟ್ಟರ್ ನಲ್ಲಿ "ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ" ಎಂದು ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಉಡುಪಿಯ ಒಂದು ಕಾಲೇಜಿನಲ್ಲಿ ಬುಗಿಲೆದ್ದ ಹಿಜಾಬ್ ಮತ್ತು ಸಮವಸ್ತ್ರ ಕಡ್ಡಾಯ ವಿವಾದವು ರಾಜ್ಯದಾದ್ಯಂತ ವ್ಯಾಪಿಸಿದೆ. ಈ ವಿವಾದದಿಂದ ಶಾಲಾ ಕಾಲೇಜುಗಳಲ್ಲಿ ಅಶಾಂತಿ ಉಂಟು ಮಾಡುವ ಚಟುವಟಿಕೆಗಳು ನಡೆಯುತ್ತಿದ್ದು, ಇದನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ 3 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿಈ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಂತರ ತೀರ್ಪನ್ನು ಇಂದು ನಿರೀಕ್ಷಿಸಲಾಗಿತ್ತು. ಆದರೆ ವಿಚಾರಣೆ ಮುಂದೂಡಿದ ಕಾರಣ ವಿದ್ಯಾರ್ಥಿಗಳು ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ :
ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಪ್ರತಿಭಟನೆ ನಡೆದಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ತೋರಿಸಿ, ಅಶ್ರುವಾಯು ಪ್ರಯೋಗ ಸಹ ಮಾಡಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸುವ ಬಗ್ಗೆ ನಡೆಯುತ್ತಿರುವ ವಿವಾಧದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ 8-02-2022 ಮತ್ತು 9-02-2022 ರಂದು 2 ದಿನಗಳ ಕಾಲ ಶಿವಮೊಗ್ಗ ನಗರದಲ್ಲಿ ಕಲಂ 144 CrPC ರೀತ್ಯಾ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಸಾರ್ವಜನಿಕರ ಗಮನಕ್ಕೆ ತಂದಿರುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.


Click it and Unblock the Notifications