ಕೋವಿಡ್ ಹಿನ್ನೆಲೆಯಲ್ಲಿ ದೇಶವೇ ನಲುಗಿ ಹೋಗುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಅಪಾರವಾದ ಪೆಟ್ಟು ಬೀಳುತ್ತಿದೆ. ಈ ಸಂದರ್ಭದಲ್ಲಿ ಅನೇಕ ಶಾಲಾ ಕಾಲೇಜುಗಳ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಇನ್ನು ಕೆಲವು ಶಾಲಾ ಕಾಲೇಜುಗಳನ್ನು ಪರೀಕ್ಷೆಗಳನ್ನು ಮುಂದೂಡಿವೆ. ಇದೇ ರೀತಿಯಲ್ಲಿ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ.
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ 2021ರ ಪರೀಕ್ಷೆಗಳನ್ನು ಮುಂದೂಡಿದೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 24 ರಿಂದ ಆರಂಭವಾಗಬೇಕಿತ್ತು ಆದರೆ ಕೊರೋನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಮುಂದೂಡಲಾಗಿದೆ. ಪ್ರಥಮ ಪಿಯುಸಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಬಡ್ತಿ ನೀಡಲಾಗಿದೆ.
ಕೋವಿಡ್ ಅಲೆಯ ಪರಿಸ್ಥಿತಿಯನ್ನು ಗಮನಿಸಿಕೊಂಡು ಮುಂದಿನ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುವುದು. ಎಸ್ಎಸ್ಎಲ್ಸಿ ಪರೀಕ್ಷೆಯ ಬಗ್ಗೆ ಇನ್ನು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಕೋವಿಡ್ ಸೋಂಕು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ಶಿಕ್ಷಕರಿಗೂ ಕೂಡ ಮನೆಯಿಂದಲೇ ಕೆಲಸ ನಿರ್ವಹಿಸಬೇಕೆಂಬ ಆದೇಶವನ್ನು ಶಿಕ್ಷಣ ಇಲಾಖೆ ಹೊರಡಿಸಿದೆ.