ಕರ್ನಾಟಕ ರಾಜ್ಯದಾದ್ಯಂತ ಜುಲೈ 26ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಲಸಿಕೆ ಪಡೆದ ವಿದ್ಯಾರ್ಥಿಗಳು ಮಾತ್ರ ತರಗತಿಗೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಉಪಮುಖ್ಯಮಂತ್ರಿಗಳು ಆದ ಡಾ.ಸಿ.ಎನ್ ಅಶ್ವತ್ಥನಾರಾಯಣ ರವರು ತಿಳಿಸಿದ್ದಾರೆ.
ಈ ಕುರಿತು ರಾಜ್ಯ ಸರ್ಕಾರ ವಿವರವಾದ ಎಸ್ಒಪಿ ಮತ್ತು ಮಾರ್ಗಸೂಚಿಗಳನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಕೋವಿಡ್ -19 ಸುರಕ್ಷತಾ ಮಾನದಂಡಗಳನ್ನು ಅನುಸರಿಸುವ ಮೂಲಕ ಉನ್ನತ ಶಿಕ್ಷಣ ಸಂಸ್ಥೆಗಳು ಭಾಗಶಃ ತೆರೆಯಲಿವೆ. ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವರೊಂದಿಗೆ ಸಭೆ ನಡೆಸಿ ನಂತರ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ಶೇ.65ರಷ್ಟು ವಿದ್ಯಾರ್ಥಿಗಳಿಗೆ ಈಗಾಗಲೇ ಲಸಿಕೆ ನೀಡಿದ್ದು, ಸರ್ಕಾರಿ, ಸರ್ಕಾರಿ ಅನುದಾನಿತ, ಖಾಸಗಿ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಗುತ್ತದೆ. ಬೋಧಕರು, ಬೋಧಕೇತರ ಸಿಬ್ಬಂದಿಗೂ ಲಸಿಕೆ ನೀಡಲಾಗುತ್ತಿದೆ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ನಗರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ನಡುವೆ ಡಿಜಿಟಲ್ ಅಂತರ ಹೋಗಲಾಡಿಸುವ ಉದ್ದೇಶದಿಂದ ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಅದನ್ನು ಕಲಿಯಲು ಲ್ಯಾಪ್ಟಾಪ್ ಮತ್ತು ಟ್ಯಾಬ್ಗಳನ್ನು ವಿದ್ಯಾರ್ಥಿಗಳಿಗೆ ಕೊಡಲಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.