ರಾಜ್ಯದಲ್ಲಿ ಹೆಚ್ಚು ಗೊಂದಲ ಮೂಡಿಸಿದ್ದ ಸಿಇಟಿ ಪರೀಕ್ಷೆ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಆಗಸ್ಟ್ 28 ಮತ್ತು 29 ರಂದು ಸಿಇಟಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಉಪಮುಖ್ಯ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ಥ್ ನಾರಾಯಣ ಘೊಷಿಸಿದ್ದಾರೆ. ಜೂನ್ 15 ರಿಂದ ರಿಜಿಸ್ಟ್ರೇಶನ್ ಪ್ರಕ್ರಿಯೆ ಆರಂಭವಾಗಲಿದ್ದು, ಈ ಭಾರಿ ವೃತ್ತಿಪರ ಕೋರ್ಸ್ ಗಳಿಗೆ ಪಿಯುಸಿ ಅಂಕಗಳನ್ನು ಪರಿಗಣಿಸಲಾಗುವುದಿಲ್ಲ, ಸಿಇಟಿ ಅಂಕಗಳನ್ನು ಆಧರಿಸಿ ಸೀಟು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿತ್ತು. ಹಾಗಾಗಿ ವೃತ್ತಿಪರ ಕೋರ್ಸ್ ಗಳಿಗೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸುವಂತೆ ಸಚಿವ ಎಸ್. ಸುರೇಶ್ ಕುಮಾರ್ ಸಲಹೆ ನೀಡಿದ್ದರು. ಅವರ ಸಲಹೆಯನ್ನು ಸರ್ಕಾರ ಪರಿಗಣಿಸಿ ಈ ನಿರ್ಧಾರ ಕೈಗೊಂಡಿದೆ.
ದ್ವಿತೀಯ ಪಿಯುಸಿಯಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಸಲಿದ್ದಾರೆ. ಒಟ್ಟು 6.5 ಲಕ್ಷ ವಿದ್ಯಾರ್ಥಿಗಳು ಪದವಿ ಕೋರ್ಸ್ಗಳಿಗೆ ಅರ್ಹತೆ ಪಡೆಯಲಿದ್ದಾರೆ. ಹೀಗಾಗಿ ಪದವಿ ಕೋರ್ಸ್ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ. ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ ಶೇ.30ರಷ್ಟು ಹೆಚ್ಚಾಗಲಿದೆ ಅವರ ಭವಿಷ್ಯಕ್ಕಾಗಿ ಉತ್ತಮ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಜೊತೆಗೆ ಸಿಇಟಿ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷೆಯ ನೋಂದಣಿ ನೋಡಿಕೊಂಡು ಎಷ್ಟು ಕೇಂದ್ರಗಳಲ್ಲಿ ಸಿಇಟಿ ನಡೆಸಬೇಕೆಂದು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಹೇಳಿದ್ದಾರೆ.
ಈ ಮುಂಚೆ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 7 ಮತ್ತು 8 ರಂದು ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕೊರೋನಾ ಕಾರಣದಿಂದಾಗಿ ನಿಗದಿತ ದಿನಾಂಕದಲ್ಲಿ ಪರೀಕ್ಷೆಯನ್ನು ನಡೆಸಲು ಸಾಧ್ಯವಾಗಿಲ್ಲವೆಂದು ಹಾಗೂ ಆಗಸ್ಟ್ 28 ಮತ್ತು 29ರಂದು ಸಿಇಟಿ ಪರೀಕ್ಷೆಯನ್ನು ನಡೆಸಲಾಗುವುದೆಂದು ತಿಳಿಸಿದ್ದಾರೆ.