ರಾಜ್ಯದಲ್ಲಿ ದ್ವಿತೀಯ ಪಿಯುಸಿ ರಿಪೀಟರ್ಸ್ ಮಾತ್ರ ಪರೀಕ್ಷೆ ಬರೆಯಬೇಕೆ ? ಎಂಬ ಪ್ರಶ್ನೆಗೆ ಇದೀಗ ರಾಜ್ಯ ಸರ್ಕಾರ ಉತ್ತರ ನೀಡಿದೆ. ರಾಜ್ಯದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಲಾಗಿತ್ತು. ಆದರೆ ರಿಪೀಟರ್ಸ್ ಗೆ ಪರೀಕ್ಷೆ ಇರುವುದಾಗಿ ತಿಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಇದರ ಪರಿಣಾಮವಾಗಿ ಇದೀಗ ರಿಪೀಟರ್ಸ್ ವಿದ್ಯಾರ್ಥಿಗಳನ್ನೂ ಕೂಡ ಪಾಸ್ ಮಾಡುವುದಾಗಿ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಶೇ.35ರಷ್ಟು ಅಂಕ ಜೊತೆಗೆ ಶೇ.೫ರಷ್ಟು ಗ್ರೇಸ್ ಮಾರ್ಕ್ಸ್ ನೀಡುವ ಮೂಲಕ ಪಾಸ್ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದರ ಫಲಿತಾಂಶವನ್ನು ಜುಲೈ 31ರೊಳಗೆ ಪ್ರಕಟಿಸುವಂತೆ ಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.
ಆದರೆ ದ್ವಿತೀಯ ಪಿಯುಸಿ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. ಖಾಸಗಿ ವಿದ್ಯಾರ್ಥಿಗಳಿಗೆ ಆಗಸ್ಟ್ 31ರೊಳಗೆ ಪರೀಕ್ಷೆ ನಡೆಸಿ, ಸೆಪ್ಟೆಂಬರ್ 20ರ ಒಳಗೆ ಫಲಿತಾಂಶ ಪ್ರಕಟಿಸುವಂತೆ ಕೋರ್ಟ್ ತಿಳಿಸಿದೆ. ಕೊವಿಡ್ ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೆ ಹಿಂದಿನ ವರ್ಷದ ಅಂಕವನ್ನು ತಿರಸ್ಕರಿಸುವ ಖಾಸಗಿ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿದಾಗ ಬರೆಯಬಹುದು ಮತ್ತು ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಬಯಸಿದ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯಬಹುದು ಎಂದು ಕೋರ್ಟ್ ನಿರ್ದೇಶನ ನೀಡಿದೆ.