ರಾಜ್ಯದಲ್ಲಿ ಕೊರೋನಾ ಇಂದಾಗಿ ಮುಚ್ಚಲಾಗಿರುವ ಶಾಲಾ ಕಾಲೇಜುಗಳನ್ನು ಆಗಸ್ಟ್ 23 ರಿಂದ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಆಗಸ್ಟ್ 23ರಿಂದ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಮೊದಲ ಹಂತದಲ್ಲಿ 9, 10, 12ನೇ ತರಗತಿಗಳು ಆರಂಭವಾಗಲಿವೆ. ಕೋವಿಡ್ ಪರಿಸ್ಥಿತಿಯನ್ನು ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿಗಳ ಶಾಲೆ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ದಿನ ಬಿಟ್ಟು ದಿನ ತರಗತಿ ನಡೆಸಲು ನಿರ್ಧರಿಸಿದ್ದು, ಶಾಲೆ ಕಾಲೇಜುಗಳನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಡಾ. ಕೆ. ಸುಧಾಕರ್, ತಜ್ಞರಾದ ಡಾ. ಸಿ.ಎನ್. ಮಂಜುನಾಥ್, ಡಾ. ದೇವಿಪ್ರಸಾದ್ ಶೆಟ್ಟಿ, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ನಾಳೆ ಎಸ್ಎಸ್ಎಲ್ಸಿ 2021 ಫಲಿತಾಂಶ:
ಮುಖ್ಯ ಮಂತ್ರಿ ಜೊತೆ ನಡೆದ ವೀಡಿಯೋ ಕಾನ್ಫರೆನ್ಸ್ ಬಳಿಕ ೨೦೨೦-೨೧ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಆಗಸ್ಟ್ 7ರಂದು ಅಂದರೆ ನಾಳೆ ಪ್ರಕಟವಾಗಲಿದೆ ಎಂದು ಘೋಷಣೆ ಮಾಡಲಾಗಿದೆ.
ಕೊರೋನಾ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ :
ಕರ್ನಾಟಕವು ಇತರೆ ರಾಜ್ಯಗಳಂತೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿಲ್ಲ ಎಂಬುದನ್ನು ನಾವು ಗಮನಿಸಬೇಕು. ಬದಲಾಗಿ ಮಂಡಳಿಯು ಹೊಸ ಮಾದರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಿತು. ಎಸ್ಎಸ್ಎಲ್ಸಿ ಆಫ್ಲೈನ್ ಪರೀಕ್ಷೆಯನ್ನು 2 ದಿನಗಳಲ್ಲಿ ಕಾಲ ನಡೆಸಲಾಯಿತು. ಜುಲೈ 19 ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಕೋರ್ ವಿಷಯಗಳನ್ನು ಮತ್ತು ಭಾಷಾ ಪರೀಕ್ಷೆಗಳನ್ನು ಜುಲೈ 23 ರಂದು ನಡೆಸಲಾಯಿತು.
ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಮಾಣಪತ್ರವನ್ನು ಪಡೆಯಲು ಪರೀಕ್ಷೆಯಲ್ಲಿ ಕನಿಷ್ಟ ಶೇಕಡಾ 35 ರಷ್ಟು ಅಥವಾ 600ಕ್ಕೆ 210 ಅಂಕಗಳನ್ನು ಪಡೆಯಬೇಕು. ಜೊತೆಗೆ ಭಾಷೆ ಪತ್ರಿಕೆಗಳಲ್ಲಿ ಕನಿಷ್ಠ 70 ಅಂಕಗಳನ್ನು ಗಳಿಸಬೇಕಾಗುತ್ತದೆ.
ಈ ಭಾರಿ ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳು ಪಾಸ್ ಪಾಸ್ :
ಪ್ರಸಕ್ತ ವರ್ಷದಲ್ಲಿ ಕೊರೋನಾ ಕಾರಣದಿಂದಾಗಿ ಶಾಲೆ ಕಾಲೇಜುಗಳು ಇನ್ನೂ ಆರಂಭವಾಗಿಲ್ಲ. ಹಾಗಾಗಿ ಪ್ರಾಥಮಿಕ ಮತ್ತು ಪ್ರಾಢಶಾಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲಾಗಿದೆ.