ರಾಜ್ಯದಲ್ಲಿ ಬುಗಿಲೆದ್ದ ಹಿಜಾಬ್ ವಿವಾದ ಕುರಿತು ಹೈಕೋರ್ಟ್ ಶಾಲಾ ಕಾಲೇಜುಗಳನ್ನು ತೆರೆಯುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸೋಮವಾರದಿಂದ 10ನೇ ತರಗತಿವರೆಗಿನ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವರು, ಗೃಹ ಸಚಿವರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಹೈಕೋರ್ಟ್ ಶಾಲಾ ಕಾಲೇಜು ಆರಂಭಕ್ಕೆ ಸೂಚಿಸಿದ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ 8 ರಿಂದ 10 ನೇ ತರಗತಿವರೆಗೆ ಶಾಲೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ತದನಂತರ ಪರಿಸ್ಥಿತಿಯನ್ನು ಗಮನಿಸಿಕೊಂಡು ಎರಡನೇ ಹಂತದಲ್ಲಿ ಪಿಯುಸಿ ಮತ್ತು ಪದವಿ ಕಾಲೇಜುಗಳನ್ನು ತೆರೆಯಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಹಿಜಾಬ್-ಕೇಸರಿ ವಿವಾದ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಂತಿಯನ್ನು ಕಾಪಾಡಲು ಶಾಲಾ ಕಾಲೇಜುಗಳಿಗೆ 3 ದಿನಗಳ ಕಾಲ ರಜೆಯನ್ನು ಸರ್ಕಾರ ಘೋಷಿಸಿತ್ತು. ಆದರೆ ಹಿಜಬ್-ಕೇಸರಿ ಪ್ರಕರಣ ಕುರಿತು ನಡೆದ ವಿಚಾರಣೆಯಲ್ಲಿ ಹೈಕೋರ್ಟ್ ಶಿಕ್ಷಣ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸೋಮವಾರದಿಂದ ಪುನಾರಂಭಿಸಲಾಗುತ್ತಿದೆ ಎಂದರು.
ಶುಕ್ರವಾರ ಸಂಜೆ ಎಲ್ಲಾ ಸಚಿವರ, ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಆಯಾ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇವೆ. ಬಳಿಕ ಎಲ್ಲಾ ಶಾಲಾ- ಕಾಲೇಜು ಆರಂಭಿಸಲು ನಿರ್ಧರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಮಕ್ಕಳು ಶಾಲಾ ಕಾಲೇಜು ಆವರಣದಲ್ಲಿ ಸಂಯಮದಿಂದ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ವಿದ್ಯಾರ್ಥಿಗಳ ಪೋಷಕರು ಹಾಗೂ ಶಿಕ್ಷಕರ ಜೊತೆ ನಾವು ಸಂಪರ್ಕದಲ್ಲಿರುತ್ತೇವೆ. ನಮ್ಮ ಅಧಿಕಾರಿಗಳು ಕೂಡ ನಿರಂತರ ಸಂಪರ್ಕದಲ್ಲಿ ಇರುತ್ತಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಗಮನ ನೀಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.