ರಾಜ್ಯದಲ್ಲಿ ಕೋವಿಡ್ ಸೋಂಕು ಭಯದ ನಡುವೆಯೇ ವಿದ್ಯಾರ್ಥಿಗಳ ಭವಿಷ್ಯದ ಒಳಿತಿಗಾಗಿ ಶಾಲೆಗಳನ್ನು ಆರಂಭಿಸಲಾಗಿದೆ. ಈಗಾಗಲೇ 6 ರಿಂದ 9ನೇ ತರಗತಿವರೆಗಿನ ಶಾಲೆಗಳು ಪುನರಾರಂಭಗೊಂಡಿದ್ದು, ಸುಸೂತ್ರವಾಗಿ ತರಗತಿಗಳು ನಡೆಯುತ್ತಿವೆ. ಈ ಬೆನ್ನಲ್ಲೆ 1 ರಿಂದ 5ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಶಾಲೆ ಆರಂಭ ಯಾವಾಗ ಎನ್ನುವ ಪ್ರಶ್ನೆಗಳಿಗೆ ಶಿವಮೊಗ್ಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರತಿಕ್ರಿಯಿಸಿದ್ದಾರೆ.
1ರಿಂದ 5ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದ ಬಳಿಕ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು. ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಮೇರೆಗೆ 1 ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ ಆರಂಭಿಸಲಾಗುವುದು ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಪಠ್ಯಕ್ಕೆ ಸಂಬಂಧಿಸಿದಂತೆ ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಈ ಬಗ್ಗೆ ಇನ್ನೂ ಯಾವುದೇ ರೀತಿಯ ನಿರ್ಧಾರ ಕೈಗೊಂಡಿಲ್ಲ. ಪಠ್ಯ ಪೂರ್ಣಗೊಳಿಸಿದರೆ ಮಕ್ಕಳಿಗೆ ಅನುಕೂಲವಾಗುತ್ತದೆ. ಈಗಾಗಲೇ ಮಕ್ಕಳು ಸಾಕಷ್ಟು ತರಗತಿಗಳನ್ನು ಕಳೆದುಕೊಂಡಿದ್ದಾರೆ. ಇನ್ನು ಬ್ರಿಡ್ಜ್ ಕೋರ್ಸ್ ಅನ್ನು ಪೂರ್ಣಗೊಳಿಸಬೇಕಿದೆ. ರಜೆ ಕಡಿಮೆ ಮಾಡಿ ಇನ್ನಷ್ಟು ತರಗತಿಗಳನ್ನು ನಡೆಸುವ ಯೋಚನೆ ನಡೆಯುತ್ತಿದೆ. ಇದು ಯೋಚನೆ ಅಷ್ಟೇ ಈ ಕುರಿತು ಇನ್ನೂ ಯಾವುದೇ ತೀರ್ಮಾನ ಮತ್ತು ಚರ್ಚೆ ನಡೆದಿಲ್ಲ. ಶಿಕ್ಷಕರ ಸಹಕಾರ ತೆಗೆದುಕೊಂಡು ಮಾಡುವ ಯೋಚನೆ ಇದೆ. ಅವಶ್ಯಕತೆ ಬಿದ್ದರೆ ಪಠ್ಯಕ್ರಮ ಕಡಿಮೆ ಮಾಡಲಾಗುವುದು ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಹೇಳಿದ್ದಾರೆ.
ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೋಂಕು ಕಡಿಮೆ ಆಗುತ್ತಿದೆ. ಒಂದುವೇಳೆ ಕೊವಿಡ್ ಹೆಚ್ಚಾದರೆ ಶಾಲೆಗಳನ್ನು ತಕ್ಷಣ ನಿಲ್ಲಿಸುವ ಸಾಧ್ಯತೆ ಇದ್ದು, ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕೋರ್ಟ್ನಿಂದ ತಡೆಯಾಜ್ಞೆ ಇದೆ. ಈ ರೀತಿಯಾಗಿ ಅಧ್ಯಾಪಕರು ಏಕೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಇದರಿಂದ ಅನೇಕರಿಗೆ ಸಮಸ್ಯೆಯಾಗಿದೆ. ಅವಶ್ಯವಿದ್ದರೆ ಕೋರ್ಟ್ ಮೂಲಕವೇ ತಡೆಯಾಜ್ಞೆ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.