ರಾಜ್ಯದಲ್ಲಿ ಕೊರೋನಾ ಇಂದಾಗಿ ಮುಚ್ಚಲಾಗಿರುವ ಶಾಲಾ ಕಾಲೇಜುಗಳನ್ನು ಆಗಸ್ಟ್ 23 ರಿಂದ ಆರಂಭಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಸ್ಟ್ 6ರಂದು ಘೋಷಿಸಿದ್ದರು.
ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಆಗಸ್ಟ್ 23ರಿಂದ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಮೊದಲ ಹಂತದಲ್ಲಿ 9, 10, 12ನೇ ತರಗತಿಗಳು ಆರಂಭವಾಗಲಿವೆ. ಕೋವಿಡ್ ಪರಿಸ್ಥಿತಿಯನ್ನು ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿಗಳ ಶಾಲೆ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಅದ್ಯಾಗ್ಯೂ ಶಾಲೆ ಕಾಲೇಜುಗಳನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲಿ ಪ್ರಕಟಿಸುವುದಾಗಿ ಘೋಷಿಸಿದ್ದರು. ಅದರಂತೆಯೇ ಕರ್ನಾಟಕ ಸರ್ಕಾರವು ಇದೀಗ ಮರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿ ಏನೆಲ್ಲಾ ಅಂಶಗಳಿವೆ ತಿಳಿಯಿರಿ.
ಕರ್ನಾಟಕ ಶಾಲೆ ಪುನರಾರಂಭಿಸಲು ಬಿಡುಗಡೆ ಮಾಡಿರುವ ಮಾರ್ಗಸೂಚಿಗಳು :
* ಕೋವಿಡ್ -19 ಪಾಸಿಟಿವ್ ದರವು ಶೇಕಡಾ 2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ದೈಹಿಕ ತರಗತಿಗಳಿಗೆ ಮಾತ್ರ ಶಾಲೆಗಳು ಮತ್ತೆ ತೆರೆಯಲಿವೆ.
* ಜಿಲ್ಲೆಗಳಲ್ಲಿ ತರಗತಿಗಳು ಆರಂಭಗೊಂಡ ನಂತರ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾದರೆ ಅಂತಹ ಸಂದರ್ಭದಲ್ಲಿ ಶಾಲೆಗಳನ್ನು ಮತ್ತೊಮ್ಮೆ ಮುಚ್ಚಲಾಗುವುದು.
* ಶಾಲಾ ಆವರಣದಲ್ಲಿ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯ.
* ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕಟ್ಟುನಿಟ್ಟಾದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಈಜುಕೊಳಗಳು ಮತ್ತು ಅಸೆಂಬ್ಲಿ ಹಾಲ್ಗಳಂತಹ ಎಲ್ಲಾ ಸಾಮಾನ್ಯ ಪ್ರದೇಶಗಳು ಸದ್ಯಕ್ಕೆ ಮುಚ್ಚಲ್ಪಡುತ್ತವೆ.
* ಶಾಲೆಗೆ ಭೇಟಿ ನೀಡುವ ಪೋಷಕರಿಗೆ ಮತ್ತು ಶಾಲೆಯಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಗೆ ಲಸಿಕೆ ಹಾಕುವುದು ಮತ್ತು ಕೋವಿಡ್ -19 ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.
* ಲಸಿಕೆ ಹಾಕದ ಸಿಬ್ಬಂದಿ ಮತ್ತು ಪೋಷಕರನ್ನು ಶಾಲಾ ಆವರಣಕ್ಕೆ ಪ್ರವೇಶಿಸಲು ಅನುಮತಿ ಇರುವುದಿಲ್ಲ.
* 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯವಾದ ನೀರು, ಉಪಹಾರವನ್ನು ತರುವಂತೆ ಸೂಚನೆ ನೀಡಲಾಗಿದೆ. ಕುಡಿಯುವ ನೀರಿನ ಅವಶ್ಯಕತೆಗೆ ಅನುಸಾರ ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
* ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ, ಆನ್ಲೈನ್ ಅಥವಾ ಪರ್ಯಾಯ ವಿಧಾನದಲ್ಲಿ ಹಾಜರಾಗಬಹುದು. ಶಾಲೆಗೆ ಹಾಜರಾಗಲು ಬಯಸದೇ ಇರುವ ವಿದ್ಯಾರ್ಥಿಗಳು ಈಗ ಅನುಸರಿಸುತ್ತಿರುವ ಆನ್ಲೈನ್/ ಇತರೆ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಬಹುದು.
* ಮಧ್ಯಾಹ್ನ ಊಟದ ವಿರಾಮದ ನಂತರ ಪ್ರೌಢ ಶಾಲೆ ಶಿಕ್ಷಕರು 8ನೇ ತರಗತಿ ವಿದ್ಯಾರ್ಥಿಗಳಿಗೆ ಪರ್ಯಾಯ ವಿಧಾನದಲ್ಲಿ ಬೋಧನೆ ಮತ್ತು ಕಲಿಕೆ ಪ್ರಕ್ರಿಯೆಗಳನ್ನು ನಡೆಸಬೇಕು.
ಶಾಲೆ ನಡೆಯುವ ಅವಧಿ:
ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:30ವರೆಗೆ ತರಗತಿಗಳು ನಡೆಯಲಿವೆ. ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 12:50ರವರೆಗೆ ತರಗತಿಗಳು ನಡೆಯಲಿದೆ.
ರಾಜ್ಯದಲ್ಲಿ ಲಸಿಕೆ ಮತ್ತು ಪರೀಕ್ಷಾ ಪ್ರಕ್ರಿಯೆಗಳನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಶಾಲೆಗಳಲ್ಲಿ ಕೋವಿಡ್ -19 ಮಾರ್ಗಸೂಚಿಗಳು ರಾಜ್ಯದ ಪರಿಸ್ಥಿತಿಗೆ ಅನುಗುಣವಾಗಿ ಬದಲಾಗುತ್ತಲೇ ಇರುತ್ತವೆ ಎನ್ನುವುದನ್ನು ಅವರು ಉಲ್ಲೇಖಿಸಿದ್ದಾರೆ.
ಕೋವಿಡ್ ಹರಡುವಿಕೆ ಹೆಚ್ಚಿರುವ ಜಿಲ್ಲೆಗಳು ಪ್ರಮುಖವಾಗಿ ಕೇರಳ ಮತ್ತು ಮಹಾರಾಷ್ಟ್ರದ ಗಡಿ ಜಿಲ್ಲೆಗಳು ಶಾಲೆಗಳನ್ನು ತೆರೆಯಬಾರದು ಮತ್ತು ಕೋವಿಡ್ ಪಾಸಿಟಿವ್ ದರವು ಶೇಕಡಾಕ್ಕಿಂತ ಎರಡಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಶಾಲೆ ತೆರೆಯಲು ಅವಕಾಶ ನೀಡಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.