ಕೊರೋನಾ ಸೋಂಕಿನಿಂದಾಗಿ ಲಾಕ್ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ ಆದರೆ ಈ ಆತಂಕಕ್ಕೆ ನಾಳೆ ತೆರೆಬೀಳಲಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯ ದಿನಾಂಕದ ಬಗ್ಗೆ ಮೇ 18 ಸೋಮವಾರದಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೊನಾ ಪರಿಣಾಮದಿಂದ ಶಿಕ್ಷಣ ಕ್ಷೇತ್ರದ ಮೇಲೆ ತೊಂದರೆಯಾಗಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ತರಗತಿಗಳು ಹೇಗಿರಬೇಕು, ಬೋಧನೆ ಹೇಗಿರಬೇಕು ಎಂಬ ಹಲವು ವಿಷಯಗಳ ಬಗ್ಗೆ ಈಗಾಗಲೇ ಬರಗೂರು ರಾಮಚಂದ್ರಪ್ಪ, ಎಲ್. ಹನುಮಂತಯ್ಯ, ಎಸ್.ಜಿ. ಸಿದ್ದರಾಮಯ್ಯ, ಬಿ.ಕೆ. ಚಂದ್ರಶೇಖರ್, ಬಿ.ಎಲ್. ಶಂಕರ್ ಸೇರಿದಂತೆ ನಾಡಿನ ಹಿರಿಯ ತಜ್ಞರ ಜೊತೆ ಚರ್ಚೆ ನಡೆಸಿ ಸಲಹೆ ಪಡೆದಿದ್ದೇನೆ. ಅಲ್ಲದೆ, ಶಿಕ್ಷಕರ ಕೇತ್ರ ಹಾಗೂ ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಲಾಗುವುದು. ಈ ಎಲ್ಲ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕದ ಬಗ್ಗೆ ಸೋಮವಾರ ಅಧಿಕಾರಿಗಳ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ್ ಕಡ್ಡಾಯ ಮಾಡಲು ಹಾಗು ಸಾಮಾಜಿಕ ಅಂತರ ಕಾಪಾಡಲು ಪರೀಕ್ಷಾ ಕೊಠಡಿಗಳಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳನ್ನು ಕೂರಿಸಲು ಚಿಂತನೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳ ಕಲಿಕೆಗೆ ಧಕ್ಕೆಯಾಗದಂತೆ ಪಠ್ಯಕ್ರಮಗಳಲ್ಲಿ ಕಡಿತ ಮಾಡುವ ಬಗ್ಗೆಯು ಚಿಂತನೆ ನಡೆಸಲಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.