ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಜುಲೈ 19 ಮತ್ತು 22ರಂದು ನಿಗದಿಯಾಗಿದ್ದು, ಪೂರ್ಣ ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಸಹ ಪರೀಕ್ಷೆ ಪರೀಕ್ಷೆ ಬರೆಯಬಹುದು ಮತ್ತು ಅವರಿಗೆ ಪ್ರವೇಶ ಪತ್ರವನ್ನು ನಿರಾಕರಿಸುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಪರೀಕ್ಷೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ ಈ ನಡುವೆ ಪರೀಕ್ಷಾ ಶುಲ್ಕ ಪಾವತಿಸದಿದ್ದರೆ ಹಾಲ್ ಟಿಕೆಟ್ ನೀಡಲಾಗುತ್ತಿಲ್ಲ ಎಂದು ಎಲ್ಲೆಡೆ ಕೇಳಿ ಬಂದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿಯ (ಕೆಎಸ್ಇಇಬಿ) ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ಅವರು ತಿಳಿಸಿದರು.
ಎಲ್ಲಾ ಹಾಲ್ ಟಿಕೆಟ್ಗಳನ್ನು ಜೂನ್ 29 ರಂದು ಕೆಎಸ್ಇಇಬಿ ಪೋರ್ಟಲ್ಗೆ ಅಪ್ಲೋಡ್ ಮಾಡಲಾಗಿದೆ. ಸಂಸ್ಥೆಗಳ ಮುಖ್ಯಸ್ಥರು ಪ್ರತಿಯೊಂದಕ್ಕೂ ಒದಗಿಸಲಾದ ಲಾಗಿನ್ ಕೋಡ್ ಬಳಸಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ (ಡಿಪಿಐ) ಆಯುಕ್ತ ವಿ ಅನ್ಬುಕುಮಾರ್ ಅವರು ಪ್ರಕಟಣೆಯನ್ನು ಹೊರಡಿಸುವ ಮೂಲಕ ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ ಅವರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ, ಯಾವುದೇ ವಿದ್ಯಾರ್ಥಿ ಹಾಲ್ ಟಿಕೆಟ್ ಸಿಗದೆ, ಮಾನಸಿಕ ತೊಂದರೆ ಮತ್ತು ಆತಂಕಕ್ಕೆ ಒಳಗಾಗದಂತೆ ಹಾಗೂ ಪರೀಕ್ಷೆಯಿಂದ ವಂಚಿತರಾಗದಂತೆ ಜಿಲ್ಲಾ ಉಪನಿರ್ದೇಶಕರು (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಶಾಲೆಗಳ ಮುಖ್ಯಸ್ಥರು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.