
ದೇಶದೆಲ್ಲೆಡೆ ಕೊರೋನಾ ಹೆಚ್ಚಳದಿಂದಾಗಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರವು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿದೆ. ಆದರೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಘೋಷಿಸಿದ್ದಾರೆ.
ರಾಜ್ಯದಲ್ಲಿ ಬೋರ್ಡ್ ಪರೀಕ್ಷೆಗಳು ನಡೆಯಲಿವೆಯೇ ಎಂಬ ಗೊಂದಲಕ್ಕೆ ತೆರೆಬಿದ್ದಿದ್ದು, ಈ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜುಲೈ ಮೂರನೇ ವಾರದಲ್ಲಿ ನಡೆಸಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. ಪರೀಕ್ಷೆಯು ಹಿಂದಿ-ಕನ್ನಡ-ಇಂಗ್ಲೀಷ್ ಸೇರಿಸಿ ಒಂದು ಪೇಪರ್, ಸಮಾಜ ವಿಜ್ಞಾನ, ಗಣಿತ, ವಿಜ್ಞಾನ ಸೇರಿಸಿ ಒಂದು ಪೇಪರ್ ನಲ್ಲಿ 40 ಬಹುಆಯ್ಕೆಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಒಟ್ಟು 120 ಅಂಕಗಳಿಗೆ 3 ಗಂಟೆಗಳ ಕಾಲ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಇನ್ನು ಪರೀಕ್ಷೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಜುಲೈ ತಿಂಗಳ ಕೊನೆಯ ವಾರದಲ್ಲಿ ಅಥವಾ ಆಗಸ್ಟ್ ತಿಂಗಳ ಮೊದಲ ವಾರದದಲ್ಲಿ ಪ್ರಕಟಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.


Click it and Unblock the Notifications











