ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 10ರೊಳಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದ ಬಳಿಕ, ಕ್ಯಾಬಿನೆಟ್ ಸಭೆಯಲ್ಲಿ ಯಶ್ವಸ್ವಿಯಾಗಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಯನ್ನು ಸಲ್ಲಿಸಿದರು. ಈ ಭಾರಿ 12 ಲಕ್ಷ ಪಿಯುಸಿ ಸೀಟುಗಳು ಲಭ್ಯವಿದ್ದು, ಎಲ್ಲಾ ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲಕವಾಗಲಿದೆ ಎಂದು ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಕೊನೆಯ ದಿನದಂದು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಸಲಾಯಿತು. ಪರೀಕ್ಷೆಗೆ ಶೇಕಡಾ 99.65ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರಥಮ ಭಾಷೆಗೆ ಒಟ್ಟು 8,19,694 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು ಅದರಲ್ಲಿ ಪರೀಕ್ಷೆಗೆ 7,83,881ವಿದ್ಯಾರ್ಥಿಗಳು ಹಾಜರಾಗಿದ್ದರು ಹಾಗೂ 3350 ವಿದ್ಯಾರ್ಥಿಗಳು ಗೈರಾಗಿದ್ದಾರೆ. ದ್ವಿತೀಯ ಭಾಷೆಗೆ 8,27,988 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಪರೀಕ್ಷೆಗೆ ಒಟ್ಟು 8,24,686 ಮಕ್ಕಳು ಹಾಜರಾಗಿದ್ದರು ಹಾಗೂ 3302 ವಿದ್ಯಾರ್ಥಿಗಳು ಗೈರಾಗಿದ್ದಾರೆ. ತೃತೀಯ ಭಾಷೆಗೆ 8,17,640 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 8,14,538 ಮಕ್ಕಳು ಹಾಜರಾಗಿದ್ದರು ಹಾಗೂ 3102 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇದಲ್ಲದೇ ಕೊವಿಡ್ ಕೇರ್ ಸೆಂಟರ್ನಲ್ಲಿ 67 ಮಕ್ಕಳು ಪರೀಕ್ಷೆ ಬರೆದಿದ್ದಾರೆ. ವಿಶೇಷ ಕೊಠಡಿಯಲ್ಲಿ 152 ಮಕ್ಕಳು ಪರೀಕ್ಷೆ ಬರೆದಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಕೇವಲ ಎರಡು ದಿನಗಳ ಕಾಲ ಜುಲೈ 19 ಮತ್ತು 22ರಂದು ವಿಭಿನ್ನ ಮಾದರಿಯಲ್ಲಿ ಬಹು ಆಯ್ಕೆಯ ಪ್ರಶ್ನೆಗಳನ್ನೊಳಗೊಂಡ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಲಾಗಿದೆ.