ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ಜುಲೈ 19 ಮತ್ತು 22ರಂದು ನಡೆಯಲಿದ್ದು, ಪರೀಕ್ಷೆಗೆ ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಜುಲೈ 15 ಮತ್ತು 17,2021ರಂದು ಅಣಕು ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
"ಪ್ರಸಕ್ತ ಸಾಲಿನಲ್ಲಿ ಪರೀಕ್ಷಾ ಮಾದರಿಯು ಬದಲಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಎಲ್ಲಾ ಕಟ್ಟುನಿಟ್ಟಾದ ಕ್ರಮಗಳೊಂದಿಗೆ ವಿದ್ಯಾರ್ಥಿಗಳಿಗೆ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಅಣಕು ಪರೀಕ್ಷೆಯನ್ನು ನಡೆಸಲಾಗುವುದು" ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಅಣಕು ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗುವುದು ಕಡ್ಡಾಯವಲ್ಲ, ಅಣಕು ಪರೀಕ್ಷೆಗಳಿಗೆ ಹಾಜರಾಗಲು ಇಚ್ಚಿಸದ ವಿದ್ಯಾರ್ಥಿಗಳು ಕೇಂದ್ರಗಳಿಗೆ ವರದಿ ಮಾಡಬೇಕಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ (ಡಿಪಿಐ) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ಸಚಿವ ಎಸ್ ಸುರೇಶ್ ಕುಮಾರ್ ಅವರು ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಅಣಕು ಪರೀಕ್ಷೆ ನಡೆಸುವ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು. ಕೋವಿಡ್ -19 ಪರಿಸ್ಥಿತಿಗೆ ಸಂಬಂಧಿಸಿದಂತೆ ಪೋಷಕರ ಕಳವಳವನ್ನು ಕೂಡ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಈ ಭಾರಿಯ ಪರೀಕ್ಷಾ ಮಾದರಿ ವಿಭಿನ್ನವಾಗಿರುವುದರಿಂದ ಈ ಅಣಕು ಪರೀಕ್ಷೆಯನ್ನು ನಡೆಸುವುದರಿಂದ ವಿದ್ಯಾರ್ಥಿಗಳು ಮತ್ತು ಶಾಲಾ ನಿರ್ವಹಣೆಯ ಸಿಬ್ಬಂದಿಗೆ ಬೋರ್ಡ್ ಪರೀಕ್ಷೆಯನ್ನು ಇನ್ನಷ್ಟು ಉತ್ತಮವಾಗಿ ನಡೆಸಲು ಸಹಕಾರಿಯಾಗುತ್ತದೆ ಎಂದು ಹೆಚ್ಚಿನ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪರಿಷ್ಕೃತ ಪರೀಕ್ಷಾ ಮಾದರಿಯ ಪ್ರಕಾರ ವಿದ್ಯಾರ್ಥಿಗಳು ಜುಲೈ 19 ರಂದು ಎಲ್ಲಾ ಮೂರು ಪ್ರಮುಖ ವಿಷಯಗಳನ್ನು (ಗಣಿತ, ವಿಜ್ಞಾನ, ಸಾಮಾಜಿಕ ವಿಜ್ಞಾನ) ಒಳಗೊಂಡ ಪತ್ರಿಕೆಗೆ ಮತ್ತು ಎಲ್ಲಾ ಭಾಷೆಗಳನ್ನು (ಮೊದಲ, ಎರಡನೆಯ ಮತ್ತು ಮೂರನೆಯ) ಒಳಗೊಂಡ ಮತ್ತೊಂದು ಪತ್ರಿಕೆಗೆ ಉತ್ತರಿಸುತ್ತಾರೆ. ಪರೀಕ್ಷೆಗಳು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ 6,000 ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳು ಒಎಂಆರ್ ಹಾಳೆಗಳಲ್ಲಿ ಬಹು ಆಯ್ಕೆಯ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ.