2021-22ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವು ಸೆಪ್ಟಂಬರ್ 20ನೇ ತಾರೀಖಿನಂದು ಪ್ರಕಟಿಸಲಾಗುವುದು ಹಾಗೆಯೇ ಕೌನ್ಸೆಲಿಂಗ್ ಪ್ರಕ್ರಿಯೆಯು ಅಕ್ಟೋಬರ್ ನಿಂದ ಪ್ರಾರಂಭವಾಗಲಿದ್ದು, ಇಂಜಿನಿಯರಿಂಗ್ ಶುಲ್ಕ ಹೆಚ್ಚಳದ ಕುರಿತು ಅತೀ ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆಗಸ್ಟ್ 28,29 ಮತ್ತು 30ರಂದು ರಾಜ್ಯದಾದ್ಯಂತ ಯಶಸ್ವಿಯಾಗಿ ನಡೆದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಸೆಪ್ಟೆಂಬರ್ 20,2021ರಂದು ಪ್ರಕಟಿಸಲಾಗುತ್ತದೆ. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು ಯಾವುದೇ ಗೊಂದಲಗಳಿಲ್ಲದೇ ನಡೆಸಲಾಗುವುದು ಎಂದರು.
ಪ್ರಸಕ್ತ ವರ್ಷದಲ್ಲಿ ಫಲಿತಾಂಶ ನೀಡುವುದೂ ಸೇರಿ ನಿಗದಿತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್ ಮುಗಿಸಲಾಗುವುದು. ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ಹಳಿತಪ್ಪಲು ಬಿಡುವುದಿಲ್ಲ. ಜೊತೆಗೆ ಪದವಿ ಪದವಿ ಪ್ರವೇಶಕ್ಕೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ರಾಜ್ಯದಲ್ಲಿ ಈ ವರ್ಷ ಕೋವಿಡ್ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಅಲ್ಲದೇ ಎಲ್ಲಾ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೇ ಉತ್ತೀರ್ಣರಾಗಿ ಮಾಡಿದೆ. ಆದರೆ ಆಗಸ್ಟ್ 28, 29 ಹಾಗೂ 30ರಂದು ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲಿದ್ದವು. ಉಳಿದ ಜಿಲ್ಲೆಗಳಲ್ಲಿ ಒಟ್ಟು 444 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಯನ್ನು ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ನಡೆಸಲಾಗಿದೆ. ರಾಜ್ಯದಲ್ಲಿ ಒಟ್ಟು 2,01,816 ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿದ್ದರು, ಅವರಲ್ಲಿ ಭೌತಶಾಸ್ತ್ರಕ್ಕೆ 1,93,588 ಮತ್ತು ರಸಾಯನಶಾಸ್ತ್ರಕ್ಕೆ 1,93,522 ಹಾಜರಾಗಿದ್ದರು. ಆ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 12 ಸೋಂಕಿತ ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳಲ್ಲಿ ಬೆಂಗಳೂರಿನಲ್ಲಿ ಹಾಗೂ ಕೋಲಾರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬ ವಿದ್ಯಾರ್ಥಿ ಸಿಇಟಿ ಬರೆದಿದ್ದರು. ಆ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಸಿಇಟಿ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳ ರ್ಯಂಕ್ ನಿರ್ಧಾರ ಮಾಡಲಾಗುವುದು ಎಂದು ಸಚಿವರು ಈಗಾಗಲೇ ತಿಳಿಸಿದ್ದಾರೆ.

ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಮುಂದಿನ ವಾರ ನಿರ್ಧಾರ:
ಎಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಮುಂದಿನ ವಾರ ಸಭೆ ನಡೆಯಲಿದೆ. ಸಭೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೊತೆಗೆ ಎಲ್ಲ ಅಂಶಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ.
ಶುಲ್ಕ ಹೆಚ್ಚಳ ಕುರಿತು ಖಾಸಗಿ ಶಿಕ್ಷಣ ಸಂಸ್ಥೆಗಳು ಉನ್ನತ ಶಿಕ್ಷಣ ಇಲಾಖೆಗೆ ಮನವಿ ಮಾಡಿದೆ. ಶುಲ್ಕ ಹೆಚ್ಚಳ ಮಾಡಿದರೂ ವಿದ್ಯಾರ್ಥಿಗಳ ಹಿತ ಕಾಪಾಡಲಾಗುವುದು ಎಂದಿದ್ದಾರೆ.
ಖಾಸಗಿ ಪದವಿ ಕಾಲೇಜು ಶುಲ್ಕ ಹೆಚ್ಚಳ:
ಖಾಸಗಿ ಪದವಿ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳದ ಕುರಿತು ಮಾತನಾಡಿದ ಅವರು "ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸಿ ಕಾಲೇಜು ನಡೆಸುವುದು ಸರಿಯಲ್ಲ, ಗುಣಮಟ್ಟದ ಶಿಕ್ಷಣ ಕೊಡುವುದಷ್ಟೇ ಸರಕಾರದ ಉದ್ದೇಶ. ಈ ಬಗ್ಗೆ ದೂರುಗಳು ಬಂದರೆ ಗಮನ ಹರಿಸಿ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು" ಎಂದು ಎಚ್ಚರಿಕೆ ನೀಡಿದ್ದಾರೆ.

ಪದವಿಗೆ ದಾಖಲಾಗಲು ಅ.1ರ ವರೆಗೆ ಅವಕಾಶ:
ಸರ್ಕಾರಿ ಕಾಲೇಜುಗಳಲ್ಲಿ ಕಡಿಮೆ ಶುಲ್ಕದಲ್ಲಿ ಪದವಿ ನೀಡಲಾಗುವುದು ಹಾಗಾಗಿ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲೇ ದಾಖಲಾಗಬಹುದು. ಅದರಲ್ಲೂ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಸೌಲಭ್ಯವಿದೆ. ಕೆಲ ಖಾಸಗಿ ಸಂಸ್ಥೆಗಳು ಉದ್ದೇಶಪೂರ್ವಕವಾಗಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿವೆ. ಆ ಬಗ್ಗೆ ಗಮನಕ್ಕೆ ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪದವಿ ಕಾಲೇಜುಗಳಿಗೆ ಶುಲ್ಕ ನಿಗದಿ ಮಾಡಲು ಸರಕಾರದ ಮಟ್ಟದಲ್ಲಿ ಸಮಿತಿ ಇಲ್ಲ. ಹೀಗಾಗಿ, ಕೆಲ ಕಾಲೇಜುಗಳು ಇದನ್ನೇ ದುರುಪಯೋಗ ಮಾಡಿಕೊಳ್ಳುತ್ತಿವೆ. ಸಮಿತಿ ಇಲ್ಲ ಎಂದ ಮಾತ್ರಕ್ಕೆ ದುಬಾರಿ ಶುಲ್ಕ ವಿಧಿಸುವ ಹಾಗಿಲ್ಲ ಎಂದ ಸಚಿವರು, ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರವರೆಗೂ ದಾಖಲಾಗಲು ಅವಕಾಶ ನೀಡಲಾಗಿದೆ ಎಂದರು.


Click it and Unblock the Notifications











