ಕೊರೊನಾ ಸಂಕಷ್ಟದ ನಡುವೆಯೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜುಲೈ 30 ಮತ್ತು 31 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಇಂಜಿನಿಯರಿಂಗ್ ಸೇರಿದಂತೆ ಇತರೆ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಕಲ್ಪಿಸುವ 2020ನೇ ಸಾಲಿನ ಸಿಇಟಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
"ಈ ಬಾರಿ ಸಿಇಟಿ ಪರೀಕ್ಷೆಗೆ ಒಟ್ಟು 1,94,419 ವಿದ್ಯಾರ್ಥಿಗಳು ರಿಜಿಸ್ಟ್ರೇಷನ್ ಪಡೆದಿದ್ದರು. ಈ ಪೈಕಿ ಭೌತಶಾಸ್ತ್ರ ವಿಷಯಕ್ಕೆ 1,75,428 (ಶೇ.90.23) ವಿದ್ಯಾರ್ಥಿಗಳು ಹಾಜರಾಗಿದ್ದರು. ರಸಾಯನಶಾಸ್ತ್ರ ವಿಷಯಕ್ಕೆ 1,75,337 (ಶೇ.90.19) ವಿದ್ಯಾರ್ಥಿಗಳು ಹಾಜರಾಗಿದ್ದರು. ಇನ್ನೂ ಫಲಿತಾಂಶ ಯಾವಾಗ ಎಂಬ ಪ್ರಶ್ನೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇನ್ನು 15 ರಿಂದ 20 ದಿನದೊಳಗೆ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಮತ್ತು ಅದಕ್ಕೆ ಬೇಕಾದ ಕ್ರಮಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ" ಎಂದು ಆನ್ಲೈನ್ ಸುದ್ದಿಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಸಿಇಟಿ ಪರೀಕ್ಷೆಗೆ ಕೊರೋನಾ ಸೋಂಕಿತ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿತ್ತು. ಒಟ್ಟು 63 ಮಂದಿ ಸೋಂಕಿತ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆದಿದ್ದಾರೆ. ಪ್ರಾಧಿಕಾರವು ಹಲವು ಮುಂಜಾಗ್ರತೆಗಳೊಂದಿಗೆ ಯಶಸ್ವಿಯಾಗಿ ಪರೀಕ್ಷೆಯನ್ನು ನಡೆಸಿದೆ.