ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅತಂತ್ರ ಸ್ಥಿತಿಗೆ ಸಿಲುಕಿ ಒದ್ದಾಡುತ್ತಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಸರ್ಕಾರ ರಚಿಸಿರುವ ತಜ್ಞರ ಸಮಿತಿ ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಿದೆ.
ಯುಜಿಸಿ ಮಾನ್ಯತೆ ಪಡೆಯಲು ಒದ್ದಾಡುತ್ತಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಲಕ್ಷಾಂತರ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. 2012ರಿಂದ ಪ್ರವೇಶ ಪಡೆದು ಪದವಿ ಮತ್ತು ಸ್ನಾತಕೋತ್ತರ ಪದವಿ ಮುಗಿಸಿದ 96,000 ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಬೇಕು ಎಂದು ಶಿಫಾರಸು ಮಾಡಲಾಗಿದೆ.
ವಿಶ್ವವಿದ್ಯಾಲಯದ ಸುಧಾರಣೆ, ಉಳಿಸಿಕೊಳ್ಳಲು ಏನು ಮಾಡಬೇಕು ಎಂಬ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭಾ ಅಧ್ಯಕ್ಷತೆಯಲ್ಲಿ ವ್ಹಿ.ಬಿ. ಕುಟಿನ್ಹೊ, ಬಿ.ಕೆ.ರವಿ, ಎಸ್.ಎ. ಕೋರಿ ಸದಸ್ಯರಾಗಿರುವ ಸಮಿತಿಯನ್ನು ರಚಿಸಲಾಗಿತ್ತು,
ಸಮಿತಿಯ ವರದಿ
ಬಿ.ಎ, ಬಿ.ಎಸ್ಸಿ, ಬಿ.ಕಾಂ ಸೇರಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ಗಳನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಇದುವರೆಗೂ ಅಂಕಪಟ್ಟಿ ನೀಡಿಲ್ಲ. ಇದರಿಂದ ಅವರು ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಹಾಗೂ ಉದ್ಯೋಗಕ್ಕೆ ಸೇರಲು ಅಡ್ಡಿಯಾಗಿದೆ. ತಾಂತ್ರಿಕ ಕೋರ್ಸ್ಗಳನ್ನು ಹೊರತುಪಡಿಸಿ ಸಾಮಾನ್ಯ ಕೋರ್ಸ್ಗಳ ಎಲ್ಲ ವಿದ್ಯಾರ್ಥಿಗಳಿಗೂ ಶೀಘ್ರವೇ ಅಧಿಕೃತ ಅಂಕಪಟ್ಟಿಗಳನ್ನು ನೀಡಬೇಕು ಎಂದು ಪ್ರಮುಖವಾಗಿ ಶಿಫಾರಸು ಮಾಡಲಾಗಿದೆ.
ಹೊರರಾಜ್ಯದಿಂದಲೂ ಸಾಕಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆದು ವಿವಿಧ ಕೋರ್ಸ್ಗಳನ್ನು ಪೂರ್ಣಗೊಳಿಸಿದ್ದಾರೆ. ಅವರೆಲ್ಲರ ಬಗ್ಗೆಯೂ ಪೂರ್ಣ ಮಾಹಿತಿ ಸಂಗ್ರಹಿಸಿ ಅವರಿಗೂ ಪ್ರಮಾಣ ಪತ್ರಗಳನ್ನು ನೀಡಬೇಕು ಎಂದು ಸಮಿತಿ ಹೇಳಿದೆ.
ಮಾನ್ಯತೆ ನೀಡುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ಸೂಚಿಸಬೇಕು ಎಂದು ಕೆಎಸ್ಒಯುನಿಂದ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯುತ್ತಿದೆ.
ಪ್ರಮಾಣ ಪತ್ರ ಪರಿಗಣಿಸಿ: ಮುಕ್ತ ವಿಶ್ವವಿದ್ಯಾಲಯದಿಂದ ವಿವಿಧ ಕೋರ್ಸ್ಗಳನ್ನು ಮುಗಿಸಿ ಈಗಾಗಲೇ ಹೊರಬಂದಿರುವ ಅಭ್ಯರ್ಥಿಗಳ ಪ್ರಮಾಣ ಪತ್ರವನ್ನು ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ಮತ್ತು ಉನ್ನತ ಶಿಕ್ಷಣ ಪ್ರವೇಶಕ್ಕೆ ಪರಿಗಣಿಸಬೇಕು. ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ವರದಿಯಲ್ಲಿ ತಿಳಿಸಲಾಗಿದೆ.