
ದೇಶದಲ್ಲಿ ಕೋವಿಡ್ ಅಪ್ಪಳಿಸಿದ ದಿನದಿಂದಲೂ ಇಲ್ಲಿಯವರೆಗೂ ಸಾವು ನೋವುಗಳೇ ಸಂಭವಿಸುತ್ತಿವೆ. ಈ ನಡುವೆಯೇ ವಿದ್ಯಾರ್ಥಿಗಳ ಶಿಕ್ಷಣ ವ್ಯವಸ್ಥೆಗೂ ಪೆಟ್ಟು ಬಿದ್ದಿದೆ. ಈ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾಲಯ ವಿಶೇಷ ಸುದ್ದಿಯೊಂದನ್ನು ನೀಡಿದೆ.
ಕೊರೋನಾ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಪಸಕ್ತ ವರ್ಷದಲ್ಲಿ ಉಚಿತವಾಗಿ ಸೀಟು ನೀಡುವ ತೀರ್ಮಾನವನ್ನು ಮೈಸೂರು ವಿಶ್ವವಿದ್ಯಾಲಯ ತೆಗೆದುಕೊಂಡಿದೆ ಎಂದು ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಹೇಳಿದ್ದಾರೆ.
ಶುಕ್ರವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದ್ದು, ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ನಿಧನ ಹೊಂದಿರುವ ಪೋಷಕರ ಮಕ್ಕಳಿಗೆ ಮೈಸೂರು ವಿವಿಯ ಘಟಕ ಕಾಲೇಜುಗಳಾದ ಮಹಾರಾಜ ಕಾಲೇಜು, ಯುವರಾಜ ಕಾಲೇಜು, ವಿಶ್ವವಿದ್ಯಾನಿಲಯ ಸಂಜೆ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಲಲಿತ ಕಲೆಗಳ ಕಾಲೇಜುಗಳಲ್ಲಿ ತಲಾ 5 ಸೀಟುಗಳು ಹಾಗೂ ಸ್ನಾತಕೋತ್ತರ ಕೇಂದ್ರಗಳಾದ ಮೈಸೂರಿನ ಮಾನಸ ಗಂಗೋತ್ರಿ, ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ, ಹಾಸನದ ಹೇಮಗಂಗೋತ್ರಿ ಹಾಗೂ ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರಗಳಲ್ಲಿ ತಲಾ 3 ಸೀಟುಗಳ ಪ್ರವೇಶಾತಿಯನ್ನು ಅರ್ಹ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.


Click it and Unblock the Notifications











