ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು ನಮಗೆ ನಮ್ಮ ಮಕ್ಕಳ ಆರೋಗ್ಯ, ಸುರಕ್ಷತೆ ಅತ್ಯಂತ ಮುಖ್ಯ. ಅವುಗಳನ್ನು ಬಲಿಕೊಟ್ಟು ಯಾರೂ ಯಾವ ಕಾರ್ಯವನ್ನೂ ಪ್ರತಿಷ್ಟೆಗಾಗಿ ಮಾಡಬಾರದು. ಮಾಡುವುದಿಲ್ಲ ಎಂದಿದ್ದಾರೆ.
ಶಾಲೆ ಪ್ರಾರಂಭದ ಬಗ್ಗೆ ರಾಜ್ಯದ ಎಲ್ಲಾ ಶಾಸಕರುಗಳ ಅಭಿಪ್ರಾಯವನ್ನು ಸುಮಾರು 9 ದಿವಸಗಳ ಹಿಂದೆ ನಾನು ಕೇಳಿದ್ದೆ. ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಂದ ಹಿಡಿದು, ಅನೇಕ ಸಚಿವರು, ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅದೇ ರೀತಿ ಆರೋಗ್ಯ ಸಚಿವರಾದ ಶ್ರೀರಾಮುಲು ರವರೂ ಸಹ ಈ ಕುರಿತು ಚರ್ಚೆ ನಡೆಸಿ ನನಗೆ ತಮ್ಮ ಅಭಿಪ್ರಾಯ ನೀಡುವುದಾಗಿ ತಿಳಿಸಿದ್ದಾರೆ. ಡಾ. ಸುಧಾಕರ್ ರವರೂ ನನಗೆ ಪತ್ರದ ಮೂಲಕ ಅಭಿಪ್ರಾಯ ತಿಳಿಸಿದ್ದಾರೆ.
ಆದರೆ ಅಭಿಪ್ರಾಯಗಳನ್ನು ಕೇಳಿದ ಮಾತ್ರಕ್ಕೆ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ನಿರ್ಧಾರವನ್ನು ಈಗಾಗಲೇ ಕೈಗೊಂಡಿದೆ ಎಂಬರ್ಥದಲ್ಲಿ ವಿಪುಲವಾಗಿ ಚರ್ಚೆ ನಡೆಯುತ್ತಿರುವುದು ದುರದೃಷ್ಟಕರ. ಮತ್ತೆ ಮತ್ತೆ ಇದು ಮರುಕಳಿಸುತ್ತಲೇ ಇದೆ. ನಾನು ಹಲವು ಬಾರಿ ಸ್ಪಷ್ಟೀಕರಣ ಕೊಡುತ್ತಲೇ ಇದ್ದೇನೆ. ಈಗಾಗಲೇ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳು ಸಹ ಈ ಕುರಿತು ಸರ್ಕಾರದ ನಿಲುವನ್ನು ಬಹಳ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಅವರು ಪೋಸ್ಟ್ ನಲ್ಲಿ ಬರೆದಿದ್ದಾರೆ.
ನಾನು ಮತ್ತೊಮ್ಮೆ, ಮಗದೊಮ್ಮೆ ಸ್ಪಷ್ಟಪಡಿಸುತ್ತೇನೆ ಶಾಲೆ ಪ್ರಾರಂಭ ಮಾಡುವ ಯಾವುದೇ ತರಾತುರಿ ನಮ್ಮ ಮುಂದೆ ಇಲ್ಲ ಎಂದು ಮತ್ತೆ ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಶಿಕ್ಷಣ ಇಲಾಖೆಯ ಮುಂದಿನ ತೀರ್ಮಾನವನ್ನು ಮಕ್ಕಳ ಹಿತವನ್ನು ಗಮನದಲ್ಲಿಟ್ಟುಕೊಂಡು ಎಲ್ಲರೊಡನೆ ಸಮಾಲೋಚನೆಯ ನಂತರ ಕೈಗೊಳ್ಳಲಾಗುತ್ತದೆಯೇ ಹೊರತು ಯಾವುದನ್ನೂ ಧಿಡೀರನೆ ಘೋಷಿಸುವುದಿಲ್ಲ. ಯಾವುದೇ ಪೋಷಕರ ಮನಸ್ಸಿನಲ್ಲಿ ಈ ಕುರಿತು ಕಿಂಚಿತ್ ಸಹ ಗೊಂದಲ ಬೇಡ ಎಂದು ಕಳಕಳಿಯಿಂದ ಮನವಿ ಮಾಡಿದ್ದಾರೆ.
ಅದಾಗ್ಯೂ ಅವರು ನಾನು ಈ ರಾಜ್ಯದ ಶಿಕ್ಷಣ ಸಚಿವ ಮಾತ್ರನಲ್ಲ, ಸುಮಾರು ಒಂದು ಕೋಟಿ ಮಕ್ಕಳ ಪೋಷಕ ಎಂಬುದರ ಅರಿವು ನನಗಿದೆ ಎಂದು ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ.


Click it and Unblock the Notifications











