ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು ಕೊಡಬೇಕು ಹಾಗಾಗಿ ತಾಂತ್ರಿಕ ಶಿಕ್ಷಣ ಆಧಾರಿತ ಶಾಲೆಗಳನ್ನು (ಟೆಕ್ ಸ್ಕೂಲ್) ಆರಂಭಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.
ಇಲೆಕ್ಟ್ರಾನಿಕ್ಸ್, ಐ.ಟಿ./ಬಿಟಿ ಮತ್ತು ಎಸ್ ಮತ್ತು ಟಿ ಇಲಾಖೆ ವತಿಯಿಂದ 'ಬಿಯಾಂಡ್ ಬೆಂಗಳೂರು' ('ಬೆಂಗಳೂರು ವ್ಯಾಪ್ತಿಯಾಚೆ') ಉಪಕ್ರಮದಡಿ ಮಂಗಳವಾರ ಆಯೋಜಿಸಿದ್ದ 'ಇನ್ನೋವೇಷನ್ ಮತ್ತು ಇಂಪ್ಯಾಕ್ಟ್' ಕಾರ್ಯಕ್ರಮವನ್ನು ಆನ್ ಲೈನ್ ಮೂಲಕ ಉದ್ಘಾಟಿಸಿದ ನಂತರ ಮಾತನಾಡಿದ ಅವರು 1960ರಷ್ಟು ಹಿಂದೆಯೇ ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಟೆಕ್ನಾಲಜಿ ಹೈಸ್ಕೂಲ್ ಇತ್ತು. ಆದರೆ ತದನಂತರದಲ್ಲಿ ಅದನ್ನು ಮುಚ್ಚಲಾಯಿತು. ಮಕ್ಕಳಲ್ಲಿ ಗ್ರಹಿಕೆ ಶಕ್ತಿ ಹೆಚ್ಚಾಗಿರುವುದರಿಂದ ಹೈಸ್ಕೂಲ್ ಮಟ್ಟದಲ್ಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು ಕೊಡುವುದು ಮುಖ್ಯ. ಹೀಗಾಗಿ ಕೆಲವು ಪ್ರೌಢಶಾಲಾ ಹಂತದಲ್ಲಿ ಪ್ರತ್ಯೇಕ ಟೆಕ್ನಾಲಜಿ ಸ್ಕೂಲ್ ಗಳನ್ನು ಆರಂಭಿಸುವುದು ಸೂಕ್ತ ಎಂದಿದ್ದಾರೆ.
ಹುಬ್ಬಳ್ಳಿ ಪ್ರದೇಶದಲ್ಲಿ ನವೀನ ಕೈಗಾರಿಕೆಗಳ ಬೆಳವಣಿಗೆಯನ್ನು ಉತ್ತೇಜಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ಅಟಲ್ ಬಿಹಾರಿ ವಾಜಪೇಯಿ ಟಿಂಕರಿಂಗ್ ಲ್ಯಾಬ್ಗಳನ್ನು ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಿದರು. ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆಗಳಂತೆ ಪಾಲಿಟೆಕ್ನಿಕ್ ಕಾಲೇಜುಗಳನ್ನು ಉನ್ನತೀಕರಿಸಬೇಕೆಂದು ಸಲಹೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಐಟಿ/ಬಿಟಿ ಸಚಿವ ಸಿ ಎನ್ ಅಶ್ವಥ್ ನಾರಾಯಣ್ ಅವರು ಹುಬ್ಬಳ್ಳಿಯಲ್ಲಿ ಶೀಘ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಡಾಟಾ ಎಂಜಿನಿಯರಿಂಗ್ಗಾಗಿ ಒಂದು ಉತ್ಕೃಷ್ಟತೆಯ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ (NEP-2020)ಯ ಆಶಯದಂತೆ ಜಾಗತಿಕವಾಗಿ ತಾಂತ್ರಿಕ ಬೆಳವಣಿಗೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳನ್ನು ಸಿದ್ಧಪಡಿಸಬೇಕು ಮತ್ತು ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆಯನ್ನು ಪಠ್ಯಕ್ರಮದ ಭಾಗವನ್ನಾಗಿ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು.
ನವೀನ ತಂತ್ರಜ್ಞಾನಗಳನ್ನು ಉತ್ತೇಜಿಸಲು ಸರ್ಕಾರವು ಪರಿಣಾಮಕಾರಿ ಕಾರ್ಯನೀತಿಗಳನ್ನು ಪರಿಚಯಿಸಿದೆ. ವಿದ್ಯಾರ್ಥಿಗಳ ಇಂಟರ್ನ್ಶಿಪ್ ಅವಧಿಯು ಮೂರು ವಾರಗಳಷ್ಟು ಇದ್ದುದನ್ನು 30 ವಾರಗಳಿಗೆ ಹೆಚ್ಚಿಸಲಾಗಿದೆ. ವಿದೇಶಗಳಲ್ಲಿ ಇಂಟರ್ನ್ಶಿಪ್ಗೆ ಹೋಗುವ ಅವಕಾಶವನ್ನೂ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಎಂದು ಸಚಿವರು ವಿವರಿಸಿದರು.