ಸರ್ಕಾರಿ ಸ್ವಾಮ್ಯದ ಎಲ್ಲಾ ನಿಗಮಗಳು, ಮಂಡಳಿಗಳು ಮತ್ತು ಏಜೆನ್ಸಿಗಳಲ್ಲೂ ಉದ್ಯೋಗದಲ್ಲಿ ತೃತೀಯ ಲಿಂಗಿಗಳಿಗೆ ಶೇ. 1ರಷ್ಟು ಮೀಸಲಾತಿಯನ್ನು ಜಾರಿಗೊಳಿಸುವಂತೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ರಾಜ್ಯ್ ಸರ್ಕಾರಕ್ಕೆ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರ ವಿಭಾಗೀಯ ಪೀಠವು ತೃತೀಯ ಲಿಂಗಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿರುವ ಸಂಗಮ ಸಂಸ್ಥೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.
ಈ ಹಿಂದೆ ನ್ಯಾಯಾಲಯ ನೀಡಿದ ನಿರ್ದೇಶನಗಳನ್ನು ಅನುಸರಿಸಿ, ರಾಜ್ಯ ಸರ್ಕಾರವು ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮ 9 ಕ್ಕೆ ತಿದ್ದುಪಡಿ ಮಾಡಿತ್ತು.
ಯಾವುದೇ ಸೇವೆ ಅಥವಾ ಹುದ್ದೆಯಲ್ಲಿ ಪ್ರತಿ ಸಾಮಾನ್ಯ ಅರ್ಹತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ತೃತೀಯ ಲಿಂಗಿಗಳಿಗೆ ಶೇ. 1 ರಷ್ಟು ಮೀಸಲಾತಿಯನ್ನು ಕಡ್ಡಾಯ ಮಾಡಲು ಸರ್ಕಾರ ನಿಯಮ 9ಕ್ಕೆ ತಿದ್ದುಪಡಿ ಮಾಡಿ, ಉಪ ನಿಯಮ (1) (ಡಿ) ಸೇರಿಸಿದೆ.
ತೃತೀಯ ಲಿಂಗಿಗಳ ( ಹಕ್ಕುಗಳ ರಕ್ಷಣೆ) ಕಾಯ್ದೆ 2019ರ ಸೆಕ್ಷನ್ 2(ಕೆ) ಅಡಿಯಲ್ಲಿ ಈ ಸಮುದಾಯಕ್ಕೆ ಉದ್ಯೋಗದಲ್ಲಿ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು.