ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ ಎಸ್ ಸಿ) ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ನಡೆಸುತ್ತಿರುವುದು ಕನ್ನಡಿಗರಿಗೆ ತಲೆ ನೋವಾಗಿ ಪರಿಣಮಿಸಿದೆ.
ಆರ್ಮಿ ಸ್ಕೂಲ್: 8000 ಬೋಧಕ ಹುದ್ದೆಗಳ ನೇಮಕಾತಿ
ರಾಜ್ಯದಲ್ಲಿನ ಹುದ್ದೆಗಳ ನೇಮಕಾತಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಶ್ನೆಪತ್ರಿಕೆ ಇರುವುದನ್ನು ಖಂಡಿಸಿ ಅನೇಕ ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ
ಈಗಾಗಲೇ ಭಾಷಾ ತಾರತಮ್ಯದಿಂದಾಗಿ ಸಾಕಷ್ಟು ಹಿನ್ನೆಡೆ ಅನುಭವಿಸಿರುವ ಕನ್ನಡಿಗರಿಗೆ ಉದ್ಯೋಗದಲ್ಲಿ ಈ ರೀತಿ ಅನ್ಯಾಯವಾಗುತ್ತಿರುವುದನ್ನು ಗಮನಿಸಿ ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಮತ್ತು ಕೇರಳ ವಲಯಕ್ಕೆ ಸೇರಿದ ಕೇಂದ್ರ ಸರ್ಕಾರದ ನಾನಾ ಇಲಾಖೆಗಳಲ್ಲಿ ಖಾಲಿ ಇರುವ 3000ಕ್ಕೂ ಹೆಚ್ಚು ಹುದ್ದೆಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ನಡೆಸುತ್ತಿದೆ, ಪಿಯುಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಹರಾಗಿದ್ದು, ಸುಮಾರು 3000 ಹುದ್ದೆಗಳಲ್ಲಿ ದ್ವಿತಿಯ ದರ್ಜೆ ಸಹಾಯಕ (ಕ್ಲರ್ಕ್), ಜ್ಯೂನಿಯರ್ ಸೆಕ್ರೆಟ್ರಿಯೇಟ್ ಅಸಿಸ್ಟಂಟ್, ಪೋಸ್ಟಲ್ ಅಸಿಸ್ಟಂಟ್, ಸಾರ್ಟಿಂಗ್ ಅಸಿಸ್ಟಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು ಸೇರಿವೆ.
ಕನ್ನಡಿಗರಿಗೆ ಅನ್ಯಾಯ
ಕನ್ನಡೇತರ ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳುವುದರಿಂದ ಕನ್ನಡಿಗರಿಗೆ ಅನ್ಯಾಯವಾಗಲಿದೆ, ರಾಜ್ಯದಲ್ಲಿ ಪರಭಾಷಿಗರ ಸಂಖ್ಯೆ ಹೆಚ್ಚಾಗುತ್ತದೆ. ಕನ್ನಡಿಗರು ನಿರುದ್ಯೋಗಿಗಳಾಗಬೇಕಾಗುತ್ತದೆ ಎಂದು ಅನೇಕ ಮಂದಿ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ನೋವನ್ನು ಹೊರಹಾಕಿದ್ದಾರೆ.
'ಕನ್ನಡ ಭಾಷೆಯಲ್ಲೇ ಪರೀಕ್ಷೆ ನಡೆಸಿದರೆ ಆಯ್ಕೆಯಾಗುವ ಕನ್ನಡಿಗರ ಸಂಖ್ಯೆ ಹೆಚ್ಚಾಗಲಿದೆ. ರಾಜ್ಯದಲ್ಲಿ ನೇಮಕವಾಗುವ ಈ ಹುದ್ದೆಗಳಿಗೆ ಹಿಂದಿ ಅಥವಾ ಇಂಗ್ಲಿಷ್ನಲ್ಲಿ ಪರೀಕ್ಷೆ ನಡೆಸುವುದು ಯಾವ ನ್ಯಾಯ? ಕನ್ನಡಿಗರು ಭಾರತ ಒಕ್ಕೂಟದಲ್ಲಿ ಎರಡನೇ ದರ್ಜೆ ನಾಗರಿಕರು ಎನ್ನುವುದಕ್ಕೆ ಇದಕ್ಕಿಂತ ಬೇರೆಯ ಉದಾಹರಣೆ ಬೇಕಿಲ್ಲ' ಎಂದು ಕನ್ನಡ ಗ್ರಾಹಕರ ಕೂಟದ ಅಭಿಯಾನಗಳು ಮತ್ತು ಭಾರತದಲ್ಲಿ ಕನ್ನಡಕ್ಕೆ ಆಡಳಿತಭಾಷೆ ಕೊಡಬೇಕೆನ್ನುವ ಅಭಿಯಾನದಲ್ಲಿ ತೊಡಗಿಸಿಕೊಂಡಿರುವ ಅರುಣ್ ಜಾವಗಲ್ ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಮೂರು ತಿಂಗಳಲ್ಲಿ ನೇಮಕಾತಿ ಪರೀಕ್ಷೆ ನಡೆಯಲಿದ್ದು ಕನ್ನಡ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲೇ ಪರೀಕ್ಷೆ ಬರೆಯುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸುವಂತೆ ನೂರಾರು ಅಭ್ಯರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸಿದ್ದಾರೆ.