ಲಾಕ್ಡೌನ್ ಕಾರಣದಿಂದಾಗಿ ಮುಂದೂಡಲಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ರೀತಿಯ ಸಿದ್ದತೆಗಳನ್ನು ಆರಂಭಿಸಿ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ರಾಜ್ಯದ ಎಲ್ಲ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರಿಗೆ ಸೂಚನೆಯನ್ನು ನೀಡಿದ್ದಾರೆ.

ಸೋಮವಾರ ಎಲ್ಲ ಶಿಕ್ಷಣ ಉಪನಿರ್ದೇಶಕರ ಜೊತೆ ವಿಡಿಯೋ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಬೇಕು ಮತ್ತು ಅವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು. ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಗೆ ಕಳುಹಿಸಿ ಎಂದು ತಿಳಿಸಿದ್ದಾರೆ.
ಕಂಟೈನ್ಮೆಂಟ್ ಝೋನ್ನಲ್ಲಿರುವ ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದಾರೆ. ಅಗತ್ಯ ಡೆಸ್ಕ್, ಬೆಂಚ್, ವ್ಯವಸ್ಥೆ ಮಾಡಿ. ಪರೀಕ್ಷಾ ಕೊಠಗಳಲ್ಲಿ ಸಿಸಿಟಿವಿ , ವೈದ್ಯಕೀಯ ಸೌಲಭ್ಯ ಕಡ್ಡಾಯವಾಗಿರಬೇಕು. ನೆಲದ ಮೇಲೆ ಅಥವಾ ಬಯಲಿನಲ್ಲಿ ಪರೀಕ್ಷೆ ಬರೆಯದಂತೆ ಎಚ್ಚರಿಕೆ ವಹಿಸಬೇಕು. ಒಂದು ಕೊಠಡಿಯಲ್ಲಿ 24 ಮಕ್ಕಳ ಬದಲಿಗೆ ಕಡಿಮೆ ಮಕ್ಕಳನ್ನು ಕೂರಿಸಲು ಸಲಹೆಯನ್ನು ನೀಡಿದ್ದಾರೆ.
ಟಿವಿಯಲ್ಲಿ ರಿವಿಷನ್ ಕ್ಲಾಸ್ ಆರಂಭ:
ಈಗಾಗಲೇ ಚಂದನ ವಾಹಿನಿಯಲ್ಲಿ ಪುನರ್ ಮನನ ತರಬೇತಿಗಳು ನಡೆಯುತ್ತಿವೆ. ಈ ವಾರದಿಂದ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೂ ರಿವಿಷನ್ ಕ್ಲಾಸ್ ಆರಂಭಿಸುವಂತೆ ಅಧಿಕಾರಿಗಳಿಗಳಿಗೆ ನಿರ್ದೇಶನ ನೀಡಿದರು. ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುವ ಮೊದಲು ಪರೀಕ್ಷಾ ಸಿದ್ದತೆಗೆ ವಿಷಯವಾರು ಅಂತರ ಕಾಯ್ದುಕೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.


Click it and Unblock the Notifications











