
2020-21ನೇ ಸಾಲಿನ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಫಲಿತಾಂಶವನ್ನು ಜುಲೈ ೩೧ರೊಳಗೆ ಪ್ರಕಟಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಬಹುತೇಕ ರಾಜ್ಯಗಳಲ್ಲಿ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿವೆ. ಹೀಗಾಗಿ ದ್ವಿತೀಯ ಪಿಯುಸಿ ಪರೀಕ್ಷೆಗಳ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಏಕರೂಪದ ಮೌಲ್ಯಮಾಪನ ವ್ಯವಸ್ಥೆ ಜಾರಿಗೊಳಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ರಾಜ್ಯಗಳ ಬೋರ್ಡ್ ಪರೀಕ್ಷೆಗೆ ಏಕರೂಪ ಮೌಲ್ಯಮಾಪನ ಪದ್ಧತಿ ಬೇಡ ಮತ್ತು ಬೋರ್ಡ್ ಪರೀಕ್ಷೆಯ ಮೌಲ್ಯಮಾಪನ ವ್ಯವಸ್ಥೆ ತೀರ್ಮಾನ ರಾಜ್ಯ ಸರ್ಕಾರಗಳಿಗೆ ಬಿಟ್ಟ ವಿಚಾರ ಎಂದು ಭಾರತದ ಸರ್ವೋಚ್ಛ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ರಾಜ್ಯ ಸರ್ಕಾರಗಳು ಇಂದಿನಿಂದ ಹತ್ತು ದಿನಗಳ ಒಳಗಾಗಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಮತ್ತು ಮೌಲ್ಯಮಾಪನವನ್ನು ಹೇಗೆ ಮಾಡಲಾಗುತ್ತದೆ ಎಂಬ ಸೂತ್ರವನ್ನು ಮಂಡಳಿಗಳು ಸುಪ್ರೀಂ ಗಮನಕ್ಕೆ ತರಬೇಕು ಎಂದು ಸುಪ್ರೀಂ ಹೇಳಿದೆ.
ಇದೇ ಸಂದರ್ಭದಲ್ಲಿ ಅನೇಕ ರಾಜ್ಯಗಳು ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿವೆ ಆದರೂ ನೀವು ಏಕೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುತ್ತಿರುವುದು ಎಂದು ಆಂಧ್ರಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎ.ಎಂ ಖಾನ್ವಿಲ್ ಕರ್ ಮತ್ತು ದಿನೇಶ್ ಮಹೇಶ್ವರಿ ಪೀಠ ತರಾಟೆಗೆ ತೆಗೆದುಕೊಂಡಿದ್ದಾರೆ. ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಒಬ್ಬ ವಿದ್ಯಾರ್ಥಿ ಸೋಂಕಿಗೆ ಒಳಗಾಗಿ ಸತ್ತರೆ ಪ್ರತಿ ವಿದ್ಯಾರ್ಥಿಗೂ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕಾದೀತು ಎನ್ನುವ ಎಚ್ಚರಿಕೆಯನ್ನು ಕೂಡ ಸುಪ್ರೀಂ ನೀಡಿದೆ.


Click it and Unblock the Notifications











