ರಾಜ್ಯದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂದು ತಮಿಳುನಾಡು ಸರ್ಕಾರದ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.
ದೇಶದೆಲ್ಲೆಡೆ ಕೊರೋನಾ ಮಹಾಮಾರಿ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜೂನ್ 15ರಿಂದ ಆರಂಭವಾಗಬೇಕಿದ್ದ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಹಾಗೆಯೇ 11ನೇ ತರಗತಿ ಪರೀಕ್ಷೆಯ ಬಾಕಿ ಉಳಿದಿದ್ದ ವಿಯಷಗಳ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಈ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಪಾಸ್ ಮಾಡುವುದಾಗಿ ಅವರು ಘೋಷಿಸಿದ್ದಾರೆ.
ತೆಲಂಗಾಣ ರಾಜ್ಯದಲ್ಲೂ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವುದಾಗಿ ಅಲ್ಲಿನ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ಅವರು ನಿನ್ನೆ ಘೋಷಿಸಿದ್ದರು. ಇದರ ಬೆನ್ನಲ್ಲೆ ಇಂದು ತಮಿಳು ನಾಡು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ತಮಿಳುನಾಡಿನಲ್ಲಿ ಈ ವರ್ಷ 9.5 ಲಕ್ಷ ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆ ಬರೆಯಲಿದ್ದರು. ಆದರೆ ಈ ವರ್ಷ ಪರೀಕ್ಷೆ ಇಲ್ಲದ ಕಾರಣ ಎಲ್ಲರನ್ನೂ ಪಾಸ್ ಮಾಡಲಾಗುತ್ತಿದೆ.