ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಆಯಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತದ 'ನೇರ ಜವಾಬ್ದಾರಿ' ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ದೇಶದ ವಿವಿಧ ಭಾಗಗಳಲ್ಲಿನ ಶಾಲೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಸೇರಿದಂತೆ ಗಂಭೀರ ಪ್ರಕರಣಗಳು ಪದೇ ಪದೇ ವರದಿಯಾದ ನಂತರ ವಿದ್ಯಾರ್ಥಿಗಳ ಭದ್ರತೆ ದೊಡ್ಡ ಕಾಳಜಿಯ ವಿಷಯವಾಗಿ ಪರಿಣಮಿಸಿರುವ ಸಂದರ್ಭದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ರಾಜ್ಯ ಸಚಿವ ಉಪೇಂದ್ರ ಕುಶ್ವಾಹ ತಿಳಿಸಿದ್ದಾರೆ.
ಗುರುಗ್ರಾಮದ ರಾಯನ್ ಇಂಟರ್ ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ ಏಳು ವರ್ಷದ ವಿದ್ಯಾರ್ಥಿಯನ್ನು ಇತ್ತೀಚೆಗೆ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಸಂಬಂಧ ಇದೇ ಶಾಲೆಯ ಪಿಯು ವಿದ್ಯಾರ್ಥಿಯನ್ನು ಸಿಬಿಐ ವಶಕ್ಕೆ ಪಡೆದಿತ್ತು. ಇದನ್ನು ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ.
ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಕಾಯ್ದುಕೊಳ್ಳುವ ಸಂಬಂಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ಈಗಾಗಲೇ ಮಾರ್ಗಸೂಚಿಗಳನ್ನು ಕಳುಹಿಸಿದೆ ಎಂದು ಅವರು ಹೇಳಿದ್ದಾರೆ.
ಶಾಲಾ ಮಕ್ಕಳ ಸುರಕ್ಷತೆ ಹಾಗೂ ಅವರು ಅಪಘಾತಕ್ಕೆ ಒಳಗಾಗುವುದನ್ನು ತಪ್ಪಿಸುವ ಸಂಬಂಧ ಸಿಬಿಎಸ್ಇ ತನ್ನ ವ್ಯಾಪ್ತಿಯ ಶಾಲೆಗಳಿಗೆ ಇತ್ತೀಚೆಗೆ ವಿಸ್ತೃತ ಮಾರ್ಗಸೂಚಿಯನ್ನು ರೂಪಿಸಿದೆ ಎಂದು ಅವರು ಉತ್ತರಿಸಿದ್ದಾರೆ.
ಸರ್ಕಾರದ ಈ ಹೇಳಿಕೆಯಿಂದಾಗಿ ಶಾಲಾ ಆಡಳಿತ ಮಂಡಳಿಗೆ ಮತ್ತಷ್ಟು ಜವಾಬ್ದಾರಿ ಹೆಚ್ಚಿದ್ದು, ಪ್ರತಿ ಮಗುವಿನ ಮೇಲು ಕಾಳಜಿವಹಿಸುವುದು ಶಾಲೆಗಳ ಕರ್ತವ್ಯವಾಗಿದೆ.