ಲಾಕ್ಡೌನ್ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಜೂನ್ ವೇಳೆಗೆ ನಡೆಸುವ ಉದ್ದೇಶ ಇದ್ದು, ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.
ವಿವಿಗಳ ಕುಲಪತಿಗಳೊಂದಿಗೆ ಗುರುವಾರ ವೀಡಿಯೋ ಕಾನ್ಫರೆನ್ಸ್ ನಡೆಸಿ ನಂತರ ಮಾತನಾಡಿದ ಅವರು, ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಪಾಠ ಪ್ರವಚನಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಪರೀಕ್ಷೆ ಯಾವಾಗ ಹೇಗೆ ನಡೆಸಬೇಕು ಎಂಬ ಬಗ್ಗೆ ವಿವಿ ಕುಲಪತಿಗಳ ಸಲಹೆ ಪಡೆಯಲಾಗಿದೆ. ಆನ್ಲೈನ್ ಮೂಲಕ ಪಾಠ ಪೂರ್ಣಗೊಳಿಸಿ ಪರೀಕ್ಷೆ ನಡೆಸಬೇಕೇ ಅಥವಾ ತರಗತಿಗಳು ಆರಂಭವಾದ ನಂತರ ತಡವಾಗಿ ಪರೀಕ್ಷೆ ನಡೆಸಬೇಕೇ ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ. ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು ವಾಟ್ಸಪ್ ಅಥವಾ ಇಮೇಲ್ ಮೂಲಕ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಪ್ರಾಯೋಗಿಕ ಪರೀಕ್ಷೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಆಂತರಿಕ ಪರೀಕ್ಷೆಯ ಅಂಕಗಳನ್ನು ಆಧರಿಸಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶ ನಿರ್ಧರಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಹೇಳಿದರು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಪಠ್ಯಕ್ರಮ, ಬೋಧನಾ ವಿಧಾನ, ಪರೀಕ್ಷಾ ವಿಧಾನ ಬದಲಾವಣೆಗೆ ಚಿಂತನೆ ನಡೆಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈಗ ಅಥವಾ ನಂತರದ ದಿನಗಳಲ್ಲಿ ಅನುಷ್ಠಾನಗೊಳಿಸಬೇಕೆ ಎಂಬ ಬಗ್ಗೆ ಪರಿಶೀಲನೆ ನಡೆಸಿ ಸಲಹೆ ನೀಡಲು ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.