ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ವಿಶ್ವಾಸ ಕಿರಣ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದಸರಾ ರಜೆ ವೇಳೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಯುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ಉದ್ದೇಶದಿಂದ 'ವಿಶ್ವಾಸ ಕಿರಣ' ಯೋಜನೆ ರೂಪಿಸಲಾಗಿದೆ.

ಅರ್ಥಶಾಸ್ತ್ರ, ಲೆಕ್ಕಶಾಸ್ತ್ರ, ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ ವಿಷಯಗಳ ಕುರಿತು ಅ.8ರಿಂದ 17ರವರೆಗೆ ತರಬೇತಿ ನೀಡಲಾಗುತ್ತದೆ.
ರಾಷ್ಟ್ರೀಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಹಿನ್ನೆಲೆಯಲ್ಲಿ ವಾರ್ಷಿಕ ಪರೀಕ್ಷೆ ಹಾಗೂ ರಾಷ್ಟ್ರಮಟ್ಟದ ಪರೀಕ್ಷೆಗಳಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕೆಂಬ ದೃಷ್ಟಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲೆ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದೆ.
ಪ್ರತಿ ತಾಲ್ಲೂಕಿನಲ್ಲಿ ನೋಡಲ್ ಕಾಲೇಜು ಗುರುತಿಸಿ ಅಲ್ಲಿ ತರಗತಿ ನಡೆಸಲಾಗುತ್ತದೆ. ತರಬೇತಿಯ ಅಂತ್ಯದಲ್ಲಿ ವಿದ್ಯಾರ್ಥಿಗಳಿಗೆ ಕಿರು ಪರೀಕ್ಷೆ ನೀಡಿ ಅದರ ಫಲಿತಾಂಶ ವರದಿಯನ್ನು ಅ.30ರೊಳಗೆ ಸಲ್ಲಿಸಬೇಕೆಂದು ಎಲ್ಲಾ ಕಾಲೇಜುಗಳಿಗೆ ತಿಳಿಸಲಾಗಿದೆ.
ಗರಿಷ್ಠ ಅಂಕ ಪಡೆದವರಿಗೆ ಬಹುಮಾನ
ಈ ತರಬೇತಿಯಲ್ಲಿ ಪಾಲ್ಗೊಂಡ ದ್ವಿತೀಯ ಪಿಯು ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಗೆ ಗರಿಷ್ಠ ಅಂಕ ಪಡೆದರೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಇಲಾಖೆ ನಿರ್ದೇಶಕಿ ಸಿ. ಶಿಖಾ ತಿಳಿಸಿದ್ದಾರೆ.
ಈ ಕಾರ್ಯಕ್ರಮದಿಂದಾಗಿ ಸರ್ಕಾರಿ ಪ.ಪೂ ಕಾಲೇಜುಗಳ ಫಲಿತಾಂಶದಲ್ಲಿ ಹೆಚ್ಚಳ ಸಾಧಿಸುವುದು ಇಲಾಖೆಯ ಮುಖ್ಯ ಗುರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.


Click it and Unblock the Notifications











