ಜಲಸಂಪನ್ಮೂಲ ಇಲಾಖೆಯ 889 ಎಂಜಿನಿಯರ್ ಕೆಪಿಎಸ್ಸಿ ಹುದ್ದೆಗಳಿಗೆ ಅಂತಿಮ ಸೆಮಿಸ್ಟರ್ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹೈಕೋರ್ಟ್ ಅನುಮತಿ ನೀಡಿದ ಹಿನ್ನಲೆ ವಿಟಿಯು ತಾತ್ಕಾಲಿಕ ಪ್ರಮಾಣ ಪತ್ರ ನೀಡಲು ನಿರ್ಧರಿಸಿದೆ.
ಅಂತಿಮ ವರ್ಷದಲ್ಲಿರುವ, 8ನೇ ಸೆಮಿಸ್ಟರ್ ಪೂರೈಸಿದ ಸಿವಿಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಪದವಿಯ ತಾತ್ಕಾಲಿಕ ಪ್ರಮಾಣಪತ್ರ ನೀಡಲಾಗುವುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆಧಾರ್ ಕಾರ್ಡ್, ಎಸ್ಎಸ್ಎಲ್ಸಿ ಅಂಕಪಟ್ಟಿ ಜೊತೆಗೆ ಪದವಿ ಪ್ರಮಾಣಪತ್ರ ಸಲ್ಲಿಸಬೇಕಾಗಿದೆ. ಹೀಗಾಗಿ ಇತ್ತೀಚೆಗೆ 8ನೇ ಸೆಮಿಸ್ಟರ್ನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪದವಿ ಪ್ರಮಾಣಪತ್ರಕ್ಕಾಗಿ ಮನವಿ ಸಲ್ಲಿಸಿದ್ದರು.
ಕೆಪಿಎಸ್ಸಿ ಪರೀಕ್ಷೆಗೆ ಹಾಜರಾಗಲು ಬಯಸುವ ಅಭ್ಯರ್ಥಿಗಳು ತಾತ್ಕಾಲಿಕ ಪದವಿ ಪ್ರಮಾಣಪತ್ರ ಕೋರಿ, ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಪೂರೈಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಸತೀಶ ಅಣ್ಣಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೈಕೋರ್ಟ್ ತೀರ್ಪು
ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) 889 ಎಂಜಿನಿಯರ್ ಹುದ್ದೆಗಳ ನೇಮಕಕ್ಕೆ 2017ರ ಜೂನ್ 22ರಂದು ಅಧಿಸೂಚನೆ ಹೊರಡಿಸಿತ್ತು. ಅಧಿಸೂಚನೆಯಲ್ಲಿ 'ಅಂತಿಮ ವರ್ಷದ ಬಿ.ಇ.ಪದವಿ ಪರೀಕ್ಷೆ ಬರೆದು ಫಲಿತಾಂಶ ನಿರೀಕ್ಷೆ ಮಾಡುತ್ತಿರುವವರು ಅರ್ಜಿ ಸಲ್ಲಿಸಲು ಅವಕಾಶವಿಲ್ಲ' ಎಂದು ತಿಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ರಚಿತಾ ಕೆ.ಗೌಡ ಹಾಗೂ ಮೈಸೂರಿನ ಎಸ್. ಮೇಘ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯುಪಿಎಸ್ಸಿಯಲ್ಲಿ ಅವಕಾಶವಿದೆ ಆದರೆ ಕೆಪಿಎಸ್ಸಿಯಲ್ಲಿ ಏಕಿಲ್ಲ ಎಂದು ಕೇಳಲಾಗಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪುರಸ್ಕರಿಸಿದ್ದು, 'ಈ ಆದೇಶವು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ. ಒಂದು ವೇಳೆ ಅರ್ಜಿದಾರರು ಫೇಲಾದರೆ ಕೋರ್ಟ್ಗೆ ಕೆಪಿಎಸ್ಸಿ ಮೆಮೊ ಸಲ್ಲಿಸಲು ಮುಕ್ತವಾಗಿದೆ' ಎಂದು ತಿಳಿಸಿತ್ತು.