ಬಂಡಾಯ ಸಾಹಿತಿ, ನಾಟಕಕಾರ, ಕನ್ನಡಪರ ಹೋರಾಟಗಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಗೋಕಾಕ್ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಪ್ರೊ.ಚಂದ್ರಶೇಖರ್ ಪಾಟೀಲ (ಚಂಪಾ) (83) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಅವರು ಇಹಲೋಕ ತ್ಯಜಿಸಿದ್ದಾರೆ.
ಕನ್ನಡದ ಹಿರಿಯ ಸಾಹಿತಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚಂದ್ರಶೇಖರ ಪಾಟೀಲ ಅವರು ಕನ್ನಡಕ್ಕಾಗಿ ಸಲ್ಲಿಸಿದ ಸೇವೆ ಅಪಾರ. ಚಂಪಾ ಅವರ ಬರಹ ಮತ್ತು ಕೊಡುಗೆಗಳು ಸಾಕಷ್ಟಿವೆ. ಅಧ್ಯಾಪಕರಾಗಿ ತಮ್ಮ ವೃತ್ತಿಜೀವನ ಆರಂಭಿಸಿದ್ದ ಚಂಪಾ ಅವರು ಸಾಹಿತಿಯಾಗಿ, ಪತ್ರಕರ್ತರಾಗಿ ನಾಡಿನಾದ್ಯಂತ ಹೆಸರು ಮಾಡಿದರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಬೋಧಕ ವೃತ್ತಿ ಆರಂಭಿಸಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಲೇ ತಮ್ಮ ಕಾವ್ಯ ಹಾಗೂ ನಾಟಕಗಳ ಮೂಲಕ ಪ್ರಸಿದ್ಧರಾದರು. ಚಂದ್ರಶೇಖರ್ ಪಾಟೀಲ್ ಅವರ ಶಿಕ್ಷಣ, ಪ್ರಸಿದ್ಧ ಬರಹಗಳು, ಅವರಿಗೆ ಸಂದ ಪ್ರಶಸ್ತಿಗಳು ಮತ್ತು ಅವರ ಸಾಧನೆಗಳ ವಿವರ ಇಲ್ಲಿದೆ.
ಚಂಪಾ ಅವರ ಶಿಕ್ಷಣ :
ಕನ್ನಡದ ಕವಿ, ನಾಟಕಕಾರ, ವಿಮರ್ಶಕ, ಹೋರಾಟಗಾರರಾದ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರಾದ ಚಂದೃಶೇಖರ ಪಾಟೀಲ ಅವರು 1939ರಲ್ಲಿ ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ ಜನಿಸಿದರು. ತಂದೆ ಬಸವರಾಜ ಹಿರೇಗೌಡ, ತಾಯಿ ಮುರಿಗೆವ್ವ. ಇವರ ಆರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು. 1956ರಲ್ಲಿ ಕರ್ನಾಟಕ ಕಾಲೇಜಿಗೆ ಸೇರಿದರು. 1960ರಲ್ಲಿ ಬಿ.ಎ. ಪೂರೈಸಿ ನಂತರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ 1962ರಲ್ಲಿ ಎಂ.ಎ. ಮಾಡಿದರು. ಬ್ರಿಟಿಷ್ ಕೌನ್ಸಿಲ್ ವಿದ್ಯಾರ್ಥಿ ವೇತನ ಪಡೆದು ಇಂಗ್ಲೆಂಡ್ನ ಲೀಡ್ಸ್ ವಿವಿಯಿಂದ ಭಾಷಾ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದ್ ನ ಕೇಂದ್ರೀಯ ಇಂಗ್ಲಿಷ್ ಸಂಸ್ಥೆಯಿಂದ ಇಂಗ್ಲಿಷ್ ಅಧ್ಯಯನ ಡಿಪ್ಲೊಮಾ ಪಡೆದರು. ಶಿಕ್ಷಣದ ಪ್ರತಿ ಹಂತದಲ್ಲಿಯೂ ಅಗ್ರ ಶ್ರೇಯಾಂಕ ಪಡೆದ ಕೀರ್ತಿ ಅವರದಾಗಿತ್ತು. ಕಾಲೇಜು ವಿದ್ಯಾರ್ಥಿಯಾಗಿದ್ದ ವಿ.ಕೃ.ಗೋಕಾಕರ ಮಾರ್ಗದರ್ಶನ ಸಿಕ್ಕಿತು. ವಿದ್ಯಾರ್ಥಿಯಾಗಿದ್ದಾಗಲೇ ಅವರ ಬಾನುಲಿ ಎಂಬ ಕವನ ಸಂಕಲನ ಪ್ರಕಟವಾಯಿತು.
ಚಂಪಾ ಅವರ ಪ್ರಸಿದ್ಧ ಬರಹಗಳು :
ಸಂಕ್ರಮಣ ಕಾವ್ಯವೆಂಬ ಪತ್ರಿಕೆಯನ್ನು ಕಳೆದ 50 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಿದ ಚಂಪಾ, ಹತ್ತಕ್ಕೂ ಹೆಚ್ಚು ಗ್ರಂಥಗಳನ್ನು ಸಂಪಾದಿಸಿದ್ದಾರೆ.
ಬಾನುಲಿ, ಮಧ್ಯಬಿಂದು, ಹೂವು ಹಣ್ಣು ತಾರೆ, ಓ ಎನ್ನ ದೇಶ ಬಾಂಧವರೇ, ಗುಂಡಮ್ಮನ ಹಾಡು ಮೊದಲಾದ ಕವನ ಸಂಗ್ರಹಗಳನ್ನು ಬಿಡುಗಡೆ ಮಾಡಿದ್ದಾರೆ.
ಕೊಡೆಗಳು, ಗೋಕರ್ಣದ ಗೌಡಶಾನಿ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ ಮೊದಲಾದ ನಾಟಕಗಳನ್ನು ರಚಿಸಿದ್ದಾರೆ.
ಬೇಂದ್ರೆ-ನಾನು ಕಂಡಂತೆ, ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ, ಚಂಪಾದಕೀಯ ಇತ್ಯಾದಿ ಕೃತಿಗಳನ್ನು ರಚಿಸಿದ್ದಾರೆ.
ಇಂಗ್ಲಿಷಿನಲ್ಲಿ ಹತ್ತಾರು ನಿಯತಕಾಲಿಕೆಗಳಿಗೆ ಲೇಖಕರಾಗಿರುವ ಇವರು ಇಂಗ್ಲಿಷಿನಲ್ಲಿ ಪೊಯಮ್ಸ್ ಅಂಡ್ ಪ್ಲೇಸ್ ಎಂಬ ಗ್ರಂಥವನ್ನು (ಕನ್ನಡದಿಂದ ಅನುವಾದಿಸಿದ ಕೃತಿಗಳು) ಹೊರತಂದಿದ್ದಾರೆ.
ಚಂಪಾ ಅವರಿಗೆ ಸಂದ ಪ್ರಶಸ್ತಿಗಳು :
ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ
ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ
ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ
ಕರ್ನಾಟಕ ನಾಟಕ ಅಕಾಡೆಮಿ ಗೌರವ ಪ್ರಶಸ್ತಿ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ,
ಸಂದೇಶ ಮಾಧ್ಯಮ ಪ್ರಶಸ್ತಿ
ಕರುನಾಡ ಭೂಷಣ ಪ್ರಶಸ್ತಿ
ಆಹ್ವಾಸ್ ನುಡಿಸಿರಿ ಪ್ರಶಸ್ತಿ
ಪಂಪ ಪ್ರಶಸ್ತಿ
ಹುಟ್ಟು ಹೋರಾಟದ ಮನೋಭಾವದವರಾಗಿದ್ದ ಚಂಪಾ ಅವರು ಕನ್ನಡ ನಾಡಿನ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಭಾಷಾ ಚಳುವಳಿಗಳಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದ್ದವರು. ಪಾಟೀಲ್ ಅವರು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಬೋಧನಾ ಮಾಧ್ಯಮವಾಗಿ ಪ್ರತಿಪಾದಿಸುತ್ತಿದ್ದರು ಮತ್ತು 2019 ರಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬೋಧನಾ ಮಾಧ್ಯಮವಾಗಿ ಇಂಗ್ಲಿಷ್ ಅನ್ನು ಪರಿಚಯಿಸುವ ಅಂದಿನ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಾತನಾಡಿದ್ದರು. ಈ ಹಿಂದೆ 2015 ರಲ್ಲಿ ತಮ್ಮ ಸ್ನೇಹಿತ ಮತ್ತು ವಚನ ವಿದ್ವಾಂಸರಾದ ಎಂ. ಎಂ. ಕಲಬುರ್ಗಿಯವರ ಹತ್ಯೆಯನ್ನು ಪ್ರತಿಭಟಿಸಿ ಅವರು ಕರ್ನಾಟಕ ಸರ್ಕಾರದ ಅತ್ಯುನ್ನತ ಸಾಹಿತ್ಯ ಗೌರವವಾದ ಪಂಪ ಪ್ರಶಸ್ತಿಯನ್ನು ಹಿಂದಿರುಗಿಸಿದರು. ಹೀಗೆ ಅವರ ಚಂಪಾ ಅವರ ಬಗ್ಗೆ ಹೇಳುತ್ತಾ ಹೋದರೆ ಸಾಧನೆ ಮತ್ತು ಕೊಡುಗೆಗಳು ಅಪಾರ. ಅವರ ನಡೆ ಮತ್ತು ದನಿ ಕನ್ನಡಪರವಾಗಿಯೇ ಮುಂಚೂಣಿಯಲ್ಲಿತ್ತು.